ರೈತರಿಗೆ ಯಾವುದೇ ಪಕ್ಷವಿಲ್ಲ. ರೈತರ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು. ಎಲ್ಲ ರೈತರನ್ನು ಸಮಾನವಾಗಿ ಪರಿಗಣಿಸಿ, ಕಬ್ಬಿನ ಅವಧಿ ಆಧರಿಸಿ ಕಟಾವು ಮಾಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮುಖಂಡ ಇಂಡುವಾಳು ಎಸ್.ಸಚ್ಚಿದಾನಂದ ಎಚ್ಚರಿಕೆ ನೀಡಿದರು.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಹಳ್ಳಿಯಲ್ಲಿ ಗ್ರಾಮಸ್ಥರು ಕಬ್ಬು ಕಟಾವಿನಲ್ಲಿ ರಾಜಕೀಯ ನಡೆಯುತ್ತಿದೆ ಎಂದು ದೂರಿದ ಹಿನ್ನೆಲೆಯಲ್ಲಿ ಅದಕ್ಕೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವಾಗಿ ಕಾರ್ಖಾನೆಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿ ಸಮರ್ಪಕವಾಗಿ ಕಬ್ಬು ಕಟಾವಿಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆ(ಮೈಶುಗರ್) ವ್ಯಾಪ್ತಿಗೆ 46 ಹಳ್ಳಿಗಳು ಬರುತ್ತವೆ. ಆದರೆ, ಎಲ್ಲೂ ಸಮರ್ಪವಾಗಿ ಕಬ್ಬು ಕಟಾವು ಮಾಡುತ್ತಿಲ್ಲ. ಕಬ್ಬು ಕಟಾವು ವಿಚಾರದಲ್ಲೂ ರಾಜಕಾರಣ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡವವರ ಕಬ್ಬನ್ನು ಮಾತ್ರ ಪ್ರಥಮ ಅದ್ಯತೆಯಲ್ಲಿ ಕಟಾವು ಮಾಡಲಾಗುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ನೊಂದಿಗೆ ಗುರುತಿಸಿಕೊಂಡಿರುವ ರೈತರ ಕಬ್ಬು ಕಟಾವಿಗೆ ವಿಳಂಬ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು.