ಮಂಡ್ಯ ವಿಧಾನಸಭಾ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಎಸ್.ಸಿ.ಮಧುಚಂದನ್ ಹಾಗೂ ಆಮ್ ಆದ್ಮಿ ಪಾರ್ಟಿ (AAP) ಅಭ್ಯರ್ಥಿಯಾಗಿ ಬೂದನೂರು ಬೊಮ್ಮಯ್ಯ ಶನಿವಾರ ನಾಮಪತ್ರ ಸಲ್ಲಿಕೆ ಮಾಡಿದರು.
ಈ ಇಬ್ಬರು ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ, ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿಗೆ ನಾಮಪತ್ರ ಸಲ್ಲಿಸಿದರು. ಮಧುಚಂದನ್ ಜೊತೆಯಲ್ಲಿ ಮುಖಂಡರಾದ ಪ್ರಸನ್ನಗೌಡ, ಹಾಲಹಳ್ಳಿ, ರವಿಕುಮಾರ್ ಸೇರಿದಂತೆ ಮತ್ತಿತರರಿದ್ದರು.
ಉಪ ವಿಭಾಗಾಧಿಕಾರಿ ಹಾಗೂ ಕ್ಷೇತ್ರದ ಚುನಾವಣಾಧಿಕಾರಿಯೂ ಆದ ಹೆಚ್.ಎಸ್. ಕೀರ್ತನ ನಾಮಪತ್ರ ಸ್ವೀಕಾರ ಮಾಡಿದರು.
ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ನಿಷೇಧ
ಸಾರ್ವತ್ರಿಕ ವಿಧಾನಸಭೆ ಚುನಾವಣಾ 2023ರ ಸಂದರ್ಭದಲ್ಲಿ ಚುನಾವಣಾ ಕಾರ್ಯ ಹಾಗೂ ಪ್ರಚಾರ ಕಾರ್ಯಗಳಲ್ಲಿ 18 ವರ್ಷಕ್ಕಿಂತ ಕೆಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ.
ಭಾರತ ಸರ್ಕಾರವು ವಿಶ್ವಸಂಸ್ಥೆಯ ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆ 992ರ ಡಿಸೆಂಬರ್ 11 ರಂದು ಒಪ್ಪಿ ಅನುಮೋದಿಸಿದೆ. ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿಸಿದೆ.
ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ, ಮಕ್ಕಳು ಕಾರ್ಯ ನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ. ಮಕ್ಕಳನ್ನು ಚುನವಣಾ ಕಾರ್ಯದಲ್ಲಿ ಬಳಸಿಕೊಂಡಲ್ಲಿ, ಕಾಯ್ದೆಯನ್ವಯ ಸೂಕ್ತ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸೊಸೈಟಿಯ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.