ಮಂಡ್ಯನಗರ ಪ್ರವೇಶಿಸುವ ಆಫೆ ಆಟೋ ಗಳಿಗೆ ದಂಡ ಹಾಕುತ್ತಿರುವುದನ್ನು ನಿಲ್ಲಿಸಬೇಕು, ಎಲ್ಲಾ ಮಾದರಿ ಆಟೋಗಳಿಗೆ ಒಂದೇ ರೀತಿಯ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಆಫೆ ಆಟೋ ಚಾಲಕರು ಮತ್ತು ಮಾಲೀಕರು ಮಂಡ್ಯದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಜಯ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ನಗರದ ಮೈಶುಗರ್ ವೃತದಿಂದ ಆಫೆ ಪ್ರಯಾಣಿಕರ ಆಟೋ ಚಾಲಕರು ಮೆರವಣಿಗೆ ಹೊರಟು, ‘ಬದುಕಿ ನಮ್ಮನ್ನು ಬದುಕಲು ಬಿಡಿ’ ಎಂಬ ಘೋಷಣೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಅಫೆ ಆಟೋಗಳಿಗೆ ಮಂಡ್ಯ ನಗರ ಪ್ರವೇಶ ನಿರ್ಬಂಧ ಮಾಡದೆ ಎಲ್ಲಾ ಮಾದರಿ ಆಟೋದವರಿಗೆ ಒಂದೇ ರೀತಿಯ ನ್ಯಾಯ ದೊರಕಿಸಿಕೊಡಬೇಕು. ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸಿದ ನಂತರ ಆಟೋ ನಂಬಿ ಬದುಕುತ್ತಿದ್ದ ಚಾಲಕರು ಮತ್ತು ಮಾಲೀಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂಡ್ಯ ನಗರದಲ್ಲಿ ಸಂಚರಿಸುವ ಪ್ರಯಾಣಿಕರ ಆಟೋದವರು ಆಫೆ ಆಟೋದವರು ನಗರ ಪ್ರದೇಶದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಸಂಚಾರ ಮಾಡುತ್ತಾರೆ ಎಂದು ತಪ್ಪಾಗಿ ಭಾವಿಸಿದ್ದಾರೆ, ಇದು ಸರಿಯಲ್ಲ, ಆಫೆ ಆಟೋಗಳು ಗ್ರಾಮೀಣ ಪ್ರದೇಶದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಮಂಡ್ಯದ ಬಸ್ ನಿಲ್ದಾಣ, ರೈಲು ನಿಲ್ದಾಣ ಹತ್ತಿರ ಇಳಿಸಿ ಮತ್ತೆ ಗ್ರಾಮೀಣ ಪ್ರದೇಶಕ್ಕೆ ಖಾಲಿ ಹೋಗುತ್ತಿವೆ ಎಂದು ಹೇಳಿದರು.
ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಯೋಗಣ್ಣ, ಕಾಂಗ್ರೆಸ್ ಮುಖಂಡ ವಿಶ್ವನಾಥ್, ಆಟೋ ಚಾಲಕರ ಮುಖಂಡರಾದ ಪುನೀತ್, ಕಾಂತರಾಜ್, ಮಧುಕುಮಾರ್ ಉಮ್ಮಡಹಳ್ಳಿ, ಕಾಶಿ ಹೆಗಡೆ, ವೆಂಕಟೇಶ್, ಚೇತನ್, ಪ್ರದೀಪ್, ಅಭಿ ನೇತೃತ್ವ ವಹಿಸಿದ್ದರು.