ಸಾವಯವ ಕೃಷಿಕ ರಮೇಶ್ ಹಾಗೂ ಗಣಿತ ಶಿಕ್ಷಕ ಎಸ್.ಹರ್ಷ ಅವರನ್ನು ಗಾಂಧಿವಾದಿ ಬಿ.ಹೆಚ್.ಮಂಗೇಗೌಡ ಕೃಷಿಕ ಹಾಗೂ ಶಿಕ್ಷಕ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.2ರಂದು ಸಂಜೆ 4 ಗಂಟೆಗೆ ಮಂಡ್ಯನಗರದ ಕರ್ನಾಟಕ ಸಂಘದ ಕುವೆಂಪು ಬಯಲು ರಂಗಮಂದಿರದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು, ಶಾಸಕ ಕೆ.ಎ.ತಿಪ್ಪೇಸ್ವಾಮಿ ಸಮಾರಂಭದ ಉದ್ಘಾಟನೆ ಮಾಡುವರು. ಶಾಸಕ ಸಿ.ಎಸ್.ಪುಟ್ಟರಾಜು ಅಧ್ಯಕ್ಷತೆ ವಹಿಸುವರು. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಪ್ರಶಸ್ತಿ ಪ್ರದಾನ ಮಾಡುವರು ಎಂದು ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಶ್ರೀನಿವಾಸ್, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್ ಭಾಗವಹಿಸುವರು. ಬೆಕ್ಕಳಲೆ ಗ್ರಾಮ ವಿದ್ಯಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಬಿ.ಎಂ.ರಘು ಉಪಸ್ಥಿತರಿರುವರು ಎಂದರು.
ಗೋಷ್ಠಿಯಲ್ಲಿ ಮುಖಂಡರಾದ ತಗ್ಗಹಳ್ಳಿ ವೆಂಕಟೇಶ್, ಲೋಕೇಶ್ ಚಂದಗಾಲು, ಉದಯಶಂಕರ್, ಹೆಚ್.ಬಿ.ನಾಗಪ್ಪ ಉಪಸ್ಥಿತರಿದ್ದರು.