ಮಂಡ್ಯ ತಾಲ್ಲೂಕಿನ ಬೂದನೂರು ನಿವೇಶನ ರಹಿತರ ಸರ್ಕಾರಿ ಭೂಮಿ ವಿವಾದಕ್ಕೆ ಕಾರಣವಾಗಿರುವ ಮಂಡ್ಯ ತಾಲೂಕು ಆಡಳಿತದ ವಿರುದ್ಧ ಸೆ.17ರಿಂದ ಮಂಡ್ಯ ತಾಲೂಕು ಕಚೇರಿ ಎದುರು ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿಯ ಬೂದನೂರು ಸತೀಶ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಎಂಟು ವರ್ಷಗಳಿಂದ ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿ ನೇತೃತ್ವದಲ್ಲಿ ನಿವೇಶನ ರಹಿತ ಬಡ, ಪರಿಶಿಷ್ಟ ಜಾತಿಯ ಕುಟುಂಬಗಳು ನಿರಂತರವಾಗಿ ಹೋರಾಟ ನಡೆಸಿ ಏಳು ಎಕರೆ ಸರ್ಕಾರಿ ಭೂಮಿಯನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದರು.
ಆದರೆ ತಾಲೂಕು ಆಡಳಿತದ ತಹಶೀಲ್ದಾರ್, ಕಂದಾಯ ಅಧಿಕಾರಿಗಳು ಮತ್ತು ಬೂದನೂರು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಕೆಲ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಬೇಜವಾಬ್ದಾರಿ ಮತ್ತು ಕರ್ತವ್ಯ ಲೋಪದಿಂದ ಭೂ ಒತ್ತುವರಿದಾರರು ಸುಳ್ಳು ದಾಖಲೆ ನೀಡಿ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಗಳಲ್ಲಿ ದಾವೇ ಹೂಡಿದ್ದಾರೆ. ಎರಡನೇ ಹಂತದ ನಿವೇಶನ ಫಲಾನುಭವಿ ಆಯ್ಕೆಯಾದರೂ ಭೂಮಿ ಸಿಗದಂತೆ ಸಂಚು ಹೂಡಿ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ದೂರಿದರು.
ನಿವೇಶನ ರಹಿತರ ಭೂಮಿ ಕಬಳಿಸಲು ತಹಶೀಲ್ದಾರರ ಸಹಿಯನ್ನು ಪೂರ್ಜರಿ ಮಾಡಲಾಗಿದೆ. ಭೂಸ್ವಾಧೀನವಾಗಿರುವ ದಾಖಲೆ ಇದ್ದರೂ ,ಸುಳ್ಳು ದಾಖಲೆ ನೀಡಿ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ದಾವೇ ಹಾಕಲು ಅಧಿಕಾರಿಗಳಿಗೆ ಕುಮ್ಮಕ್ಕು ನೀಡಿದ್ದಾರೆ .ಜಿಲ್ಲಾಧಿಕಾರಿಗಳನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ದೂರಿದರು.
ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ ಹೈಕೋರ್ಟಿನಲ್ಲಿರುವ ಪ್ರಕರಣಗಳನ್ನು ವಜಾಗೊಳಿಸುವಂತೆ ಒತ್ತಾಯಿಸಿ, ಭೂಮಿ ಹಂಚಿಕೆ ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ,ಭೂ ಒತ್ತುವರಿದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 17 ರಿಂದ ತಾಲೂಕು ಕಚೇರಿ ಎದುರು ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.
ಗೋಷ್ಟಿಯಲ್ಲಿ ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿಯ ಸವಿತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.