2022ರ ಡಿಸೆಂಬರ್ 18 ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆಂಬ ಆರೋಪದ ಮೇರೆಗೆ ಬಿಜೆಪಿ ಕಾರ್ಯಕರ್ತ ಡಣಾಯಕನಪುರದ ರವಿ ಅಲಿಯಾಸ್ ಬುಲೆಟ್ ರವಿ ಎಂಬಾತನನ್ನು ಮಂಡ್ಯ ಪಶ್ಚಿಮ ಠಾಣೆಯ ಪೋಲಿಸರು ಬಂಧಿಸಿದ್ದಾರೆ.
ಕಳೆದ ರಾತ್ರಿ ಬಿಜೆಪಿ ಕಾರ್ಯಕರ್ತ ರವಿಯನ್ನು ಬಂಧಿಸಿರುವ ಪೋಲಿಸರು ಇಂದು ಬೆಳಿಗ್ಗೆ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು,ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಡ್ಯದ ಸಂಜಯ ವೃತ್ತದಲ್ಲಿ 2022 ಡಿಸೆಂಬರ್ 18 ರಂದು ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಪಾಕ್ ವಿದೇಶಾಂಗ ಸಚಿವನ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರು. ಘೋಷಣೆ ಕೂಗುವಾಗ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು.
ಒಂದೂವರೆ ವರ್ಷದ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಕನ್ನಂಬಾಡಿ ಕುಮಾರ್ ಎಂಬುವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ದೂರಿನನ್ವಯ ಬಿಜೆಪಿ ಕಾರ್ಯಕರ್ತರಾದ ರವಿ, ಶಿವಕುಮಾರ್ ಆರಾಧ್ಯ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು, ಸದ್ಯ ಬಿಜೆಪಿ ಕಾರ್ಯಕರ್ತ ರವಿಯನ್ನು ಬಂಧಿಸಿದ್ದಾರೆ.