ಜೆಡಿಎಸ್ ಪಕ್ಷ ಹಾಗೂ ವರಿಷ್ಠರು ಅವಕಾಶ ಕಲ್ಪಿಸಿ ಕೊಟ್ಟರೆ ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧನಿದ್ದೇನೆ ಎಂದು ಮನ್ಮುಲ್ ಹಾಗೂ ಶ್ರೀ ಶಂಭು ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಆರ್ ರಾಮಚಂದ್ರು ತಿಳಿಸಿದರು.
ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಏರ್ಪಡಿಸಿದ್ದ ಬಸರಾಳು ಹೋಬಳಿ ವ್ಯಾಪ್ತಿಯ ಗ್ರಾಮಗಳಾದ ತಿರುಮಲಾಪುರ, ಮನುಗನಹಳ್ಳಿ, ಹಾರಕದಹಳ್ಳಿ , ಕೆಂಚನಹಳ್ಳಿ ಮತ್ತು ಬಸರಾಳು ಕರ್ನಾಟಕ ಪಬ್ಲಿಕ್ ಸ್ಕೂಲ್,ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ವಿತರಿಸಿ ಅವರು ಮಾತನಾಡಿದರು.
ಕಳೆದ 15 ವರ್ಷಗಳಿಂದ ನಾನು ಸಕ್ರಿಯವಾಗಿ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದು ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ,ಪ್ರಸ್ತುತ ಮನ್ ಮುಲ್ ಅಧ್ಯಕ್ಷನಾಗಿ ಎಲ್ಲರ ಸಹಕಾರದಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ.ಜನರ ಸೇವೆಗೆ ನಾನು ಸದಾ ಸಿದ್ಧನಿದ್ದೇನೆ ಎಂದರು.
ಈಗಾಗಲೇ ಶಂಭು ಸೇವಾ ಟ್ರಸ್ಟ್ ವತಿಯಿಂದ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಕೆಲಸ ನಿರ್ವಹಿಸುತ್ತಿದ್ದೇನೆ.ಬಸರಾಳು ಹೋಬಳಿಯ ಜನತೆಯ ಅಭಿಪ್ರಾಯ ಪಡೆದು ಪಕ್ಷ ಅವಕಾಶ ಕಲ್ಪಿಸಿಕೊಟ್ಟಲ್ಲಿ ವಿಧಾನಸಭೆಗೆ ಸ್ಪರ್ಧೆ ಮಾಡುವುದಾಗಿ ತಿಳಿಸಿದರು.
ಮುಂದಿನ ದಿನಗಳಲ್ಲಿ ಶಂಭು ಸೇವಾ ಟ್ರಸ್ಟ್ ವತಿಯಿಂದ ಗ್ರಾಮೀಣ ಭಾಗದ ಮಹಿಳೆಯರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಶಂಭು ಧರ್ಮ ಯಾತ್ರೆ ಹಮ್ಮಿಕೊಳ್ಳುವ ಮೂಲಕ ಮಹಿಳೆಯರನ್ನ ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಧರ್ಮದರ್ಶನ ಮಾಡಿಸಿಕೊಂಡು ಬರುವುದಾಗಿ ತಿಳಿಸಿದರು.
ಬಸರಾಳು ಹೋಬಳಿಯ ಜನ ನನಗೆ ಹೆಣ್ಣು,ಅನ್ನ ಕೊಟ್ಟು ಉದ್ಯಮದಲ್ಲಿ ಬೆಳೆಸಿದ್ದಾರೆ. ಟಿಕೆಟ್ ಸಿಗಲಿ ಬಿಡಲಿ ಅಂತಿಮವಾಗಿ ಜನರ ಜೊತೆ ಇದ್ದು ಅವರ ಜೊತೆ ಸೇವಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಶ್ರೀನಿವಾಸ್, ಮಾಜಿ ಶಾಸಕ ಜಿ.ಬಿ. ಶಿವಕುಮಾರ್, ಟ್ರಸ್ಟ್ ಕಾರ್ಯದರ್ಶಿ ಬಿ.ಆರ್ ಸುರೇಶ್, ಬಾಲರಾಜು, ಸ್ನೇಹಿತರು, ಗ್ರಾಮದ ಮುಖಂಡರುಗಳು,ಯುವಕರು ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರು ಉಪಸ್ಥಿತರಿದ್ದರು.