ಮಂಡ್ಯ ಜಿಲ್ಲೆಯಲ್ಲಿ ಕಳೆದ 2-3 ವರ್ಷಗಳಿಂದ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿರುವ ಗುತ್ತಿಗೆದಾರರಿಗೆ ಸುಮಾರು 500 ಕೋಟಿ ರೂ.ಗಳಷ್ಟು ಬಾಕಿ ಬಿಡುಗಡೆ ಮಾಡಬೇಕಿದ್ದು, ಪರ್ಸೆಟೆಂಜ್ ಪಡೆಯುವ ಉದ್ದೇಶದಿಂದ ಸರ್ಕಾರವು ಗುತ್ತಿಗೆದಾರರಿಗೆ ಎಲ್ಓಸಿ ಬಿಡುಗಡೆ ಮಾಡುತ್ತಿಲ್ಲ ಎಂದು ಮಂಡ್ಯ ಜಿಲ್ಲಾ ಗುತ್ತಿಗೆದಾರರ ಸಂಘದ ಖಜಾಂಚಿ ಎಂ ಎಚ್ ಯತೀಶ್ ಆರೋಪಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಗುತ್ತಿಗೆದಾರ ಬಾಕಿ ಬಿಲ್ ಪಾವತಿಗಾಗಿ ಎಲ್ ಓ ಸಿ ಬಿಡುಗಡೆ ಮಾಡಲಾಗಿದೆ, ಆದರೆ ಮಂಡ್ಯ ಜಿಲ್ಲೆಗೆ ಮಾತ್ರ ಎಲ್ ಓ ಸಿ ನೀಡಿಲ್ಲ, ಇದರ ಹಿಂದೆ ಕಮೀಷನ್ ಗೆ ಪರೋಕ್ಷವಾಗಿ ಬೇಡಿಕೆ ಇಟ್ಟಿರುವ ಹುನ್ನಾರ ಇದೆ ಎಂದು ದೂರಿದರು.
ಸಾಂಕೇತಿಕ ಪ್ರತಿಭಟನೆ
ಗುತ್ತಿಗೆದಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರ ಬಂಧನ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾಕ್ ನಲ್ಲಿ ಜ.18ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಒಂದು ದಿನದ ಸಾಂಕೇತಿಕ ಪ್ರತಿಭಟನೆಗೆ ಮಂಡ್ಯ ಜಿಲ್ಲಾ ಗುತ್ತಿಗೆದಾರರು ಒಂದು ದಿನ ತಮ್ಮ ಕಾಮಗಾರಿಯನ್ನು ಸ್ಥಗಿತಗೊಳಿಸಿ ಭಾಗವಹಿಸುವಂತೆ ಮನವಿ ಮಾಡಿದರು.
ಮಂಡ್ಯ ಜಿಲ್ಲೆಯ ಗುತ್ತಿಗೆದಾರರಿಗೆ ಲೋಕೋಪಯೋಗಿ ಇಲಾಖೆಯಲ್ಲಿ ನೂರಾರು ಕೋಟಿ ರೂ. ಪಾವತಿಸಬೇಕಾಗಿದ್ದು, ಇನ್ನಿತರೆ ಇಲಾಖೆಗಳಲ್ಲಿ ಬಾಕಿ ಹಣ ಬಿಡುಗಡೆ ಮಾಡಬೇಕಾಗಿದೆ. ಹಣ ಪಾವತಿಯಾಗದೇ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೊಳಗಾಗಿದ್ದು, ಸಾಲ ಸೋಲ ಮಾಡಿ ಕಾಮಗಾರಿಯನ್ನು ನಿರ್ವಹಿಸಿದ್ದು, ಬಡ್ಡಿ ಕಟ್ಟಲು ಸಾಧ್ಯವಾಗದೇ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆಂದು ಹೇಳಿದರು.
ರಾಜ್ಯ ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳು ಮಂಡ್ಯ ಜಿಲ್ಲೆಗೆ ಎಲ್.ಓ.ಸಿ. ಹಣ ಬಿಡುಗಡೆ ಮಾಡುವಾಗ ತಾರತಮ್ಯ ನೀತಿ ಅನುಸರಿಸಿ, ಅಗತ್ಯ ಹಣ ಬಿಡುಗಡೆ ಮಾಡಿಲ್ಲ, ಆದ್ದರಿಂದ ಮಂಡ್ಯ ಜಿಲ್ಲೆಯ ಎಲ್ಲಾ ಗುತ್ತಿಗೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ರಾಮಲಿಂಗಣ್ಣ, ಪದಾಧಿಕಾರಿಗಳಾ ಎಂ.ಟಿ.ರಾಜ್, ರವೀಂದ್ರ ಹಾಗೂ ನವೀನ್ ಕುಮಾರ್ ಉಪಸ್ಥಿತರಿದ್ದರು.