ಮಂಡ್ಯ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಉದ್ಯಮಗಳಿಲ್ಲ, ಇಲ್ಲಿನ ಜನರು ಉದ್ಯೋಗಗಳನ್ನು ಅರಸಿ ಬೆಂಗಳೂರು ಮಹಾನಗರ ಹಾಗೂ ಮೈಸೂರು ಕಡೆಗೆ ವಲಸೆ ಹೋಗುತ್ತಿದ್ದಾರೆ, ಆದ್ದರಿಂದ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ, ಜನರಿಗೆ ಉದ್ಯೋಗ ಕಲ್ಪಿಸುವಂತಹ ಭರವಸೆಗಳನ್ನು ಕಾಂಗ್ರೆಸ್ ಪಕ್ಷದ ಪ್ರನಾಳಿಕೆಗಳ ಪಟ್ಟಿಯಲ್ಲಿ ಸೇರಿಸಬೇಕೆಂದು ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಪಕ್ಷದ ನಾಯಕರಿಗೆ ಮನವಿ ಮಾಡಿದರು.
ಮಂಡ್ಯದಲ್ಲಿ ನಡೆದ ‘ಪ್ರಜಾಧ್ವನಿ’ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಂಡ್ಯವು ಬೆಂಗಳೂರು-ಮೈಸೂರುಗಳ ನಡುವೆ ಇದ್ದರೂ ನಿರೀಕ್ಷಿತ ರೀತಿಯಲ್ಲಿ ಅಭಿವೃದ್ಧಿಯಾಗಿಲ್ಲ, ಇಲ್ಲಿನ ಜನ ಕೃಷಿಯನ್ನೆ ಹೆಚ್ಚು ಅವಲಂಬಿಸಿದ್ದಾರೆ, ಆದ್ದರಿಂದ ಉದ್ಯಮಗಳನ್ನು ಸ್ಥಾಪಿಸುವಲ್ಲಿ ಕ್ರಮ ವಹಿಸಬೇಕೆಂದರು.
ಇತ್ತೀಚಿನ ದಿನಗಳಲ್ಲಿ ರೈತರ ಕುಟುಂಬಗಳು ವಿಂಗಡಣೆಗೊಂಡು, ಅತ್ಯಂತ ಚಿಕ್ಕ ಹಿಡಿವಾಳಿದಾರರಾಗಿ ರೈತರು ಬದಲಾಗಿದ್ದಾರೆ, ಆದ್ದರಿಂದ ಅವರಿಗೆ ಉದ್ಯೋಗದ ಅವಶ್ಯಕತೆ ಇದೆ. ಅಲ್ಲದೆ ರೈತರು ಜಮೀನುಗಳಿಗೆ ಮಿತಿ ಮೀರಿದ ರಾಸಾಯನಿಕ ಗೊಬ್ಬರಗಳು ಹಾಗೂ ಯಥೇಚ್ಛವಾದ ನೀರನ್ನು ಬಳಕೆ ಮಾಡುತ್ತಿದ್ದು, ಇದನ್ನು ನಿಯಂತ್ರಣಕ್ಕೆ ತರಲು ಹನಿ ಮತ್ತು ತುಂತುರು ನೀರಾವರಿ ಪದ್ಧತಿಯಲ್ಲಿ ಬೆಳೆಗಳನ್ನು ಬೆಳೆಯುವ ತಂತ್ರಜ್ಞಾನಗಳನ್ನು ಪರಿಚಯಿಸಬೇಕಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರೈತರ ಎಲ್ಲಾ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ, ಆದ್ದರಿಂದ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.