Saturday, May 18, 2024

ಪ್ರಾಯೋಗಿಕ ಆವೃತ್ತಿ

ವಿಷಾನಿಲ ಸೋರಿಕೆ : ವಾರದೊಳಗೆ ವರದಿ ಸಲ್ಲಿಸಲು ಡಿಸಿ ಸೂಚನೆ

ಮಂಡ್ಯ ತಾಲ್ಲೂಕು ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದಲ್ಲಿ ಮೆ|| ಕೀರ್ತಿ ರಾಸಾಯನಿಕ ಕಾರ್ಖಾನೆಯ ವಿಷಾನಿಲ ಸೋರಿಕೆ ಸಂಬಂಧ ರೈತರಿಗೆ ಪರಿಹಾರ ನೀಡುವ ಕುರಿತು ಜಂಟಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಮಂಡ್ಯ ಜಿಲ್ಲಾಧಿಕಾರಿ ಅಶ್ವತಿ ಅವರು ಸೂಚನೆ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ರೈತರಿಗೆ ನಷ್ಟ ಪರಿಹಾರ ಹಾಗೂ ರಾಸಾಯನಿಕ ಕಾರ್ಖಾನೆ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದರು.

ಇದಕ್ಕೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಅವರು, ವಿಷಾನಿಲ ಸೋರಿಕೆಯಾಗಿ ಬೆಳೆ ನಾಶವಾಗಿರುವ ಸಂತ್ರಸ್ತ ರೈತರಿಗೆ ಪರಿಹಾರ ನೀಡುವ ಸಂಬಂಧ ಜಂಟಿ ಸಮೀಕ್ಷೆ ನಡೆಸಿ ಕೂಲಂಕಷವಾಗಿ ಪರಿಶೀಲನೆ ನಡೆಸಿ, ವರದಿಯನ್ನು ಮಂಡ್ಯ ತಹಸೀಲ್ದಾರ್ ರವರ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಒಂದು ವಾರದ ಒಳಗೆ ಸಲ್ಲಿಸಲು ಸೂಚಿಸಿ ಆದೇಶವನ್ನು ಹೊರಡಿಸಿದ್ದಾರೆ.

ಮಂಡ್ಯ ಉಪ ವಿಭಾಗಾಧಿಕಾರಿ, ತಹಸೀಲ್ದಾರ್, ಮಂಡ್ಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಂಡ್ಯ ಸಾಮಾಜಿಕ ವಿಭಾಗದ ವಲಯ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

2022ರ ಜನವರಿ 15ರಂದು ರಾಸಾಯನಿಕ (ಸಲ್ಫೂರಿಕ್ ಆ್ಯಸಿಡ್) ತಯಾರಿಕಾ ಘಟಕದಿಂದ ವಿಷಾನಿಲ ಸೋರಿಕೆಯಾಗಿ ಸುತ್ತಮುತ್ತಲ ಗ್ರಾಮಗಳ ಸುಮಾರು 12 ರಿಂದ 15 ಎಕರೆ ರೈತರ ಜಮೀನು ಹಾಗೂ 20 ಎಕರೆಗೂ ಮೇಲ್ಪಟ್ಟು ಅರಣ್ಯ ಇಲಾಖೆಗೆ ಸೇರಿದ ಅರಣ್ಯ ಪ್ರದೇಶವು ಹಾನಿಗೊಳಪಟ್ಟಿದ್ದವು.

ಇದರಲ್ಲಿ ರೈತರು ಬೆಳೆದ ನೂರಾರು ತೆಂಗಿನ ಮರಗಳು, ಟೊಮ್ಯಾಟೋ, ರಾಗಿ, ಹುರುಳಿ ಬೆಳೆಗಳು ಸಂಪೂರ್ಣ ನಾಶವಾಗಿರುವುದರ ಜೊತೆಗೆ ನೀಲಗಿರಿ ಮರಗಳು ಸಹ ನಾಶವಾಗಿತ್ತು. ಆದರೆ, ಈ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ.

ರೈತರಿಗೆ ಆದ ನಷ್ಟವನ್ನು ಕೂಡಲೇ ಭರಿಸಿಕೊಡಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಗಳು,ಸಕ್ಕರೆ ಸಚಿವರು,ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಅಲ್ಲದೆ ಸದನದಲ್ಲೂ ವಿಷಾನಿಲ ಸೋರಿಕೆ ಹಾಗೂ ಇದರಿಂದ ಸಂತ್ರಸ್ತರಾದ ರೈತರಿಗೆ ತುರ್ತಾಗಿ ಪರಿಹಾರ ವಿತರಿಸಲು ಸಂಬಂಧಪಟ್ಟವರಿಗೆ ಆದೇಶ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದರು.

ಇದನ್ನು ಓದಿ: ಮಳವಳ್ಳಿ ಪುರಸಭೆಗೆ ನೂತನ ಉಪಾಧ್ಯಕ್ಷ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!