ಅಧಿಕಾರ ದುರ್ಬಳಕೆ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಉದ್ಯೋಗ ಗಿಟ್ಟಿಸಿಕೊಂಡು ವಂಚನೆ ಎಸಗಿದ ಆರೋಪಗಳನ್ನು ಎದುರಿಸುತ್ತಿರುವ ವಿವಾದಿತ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ಕೇಂದ್ರ ಸರ್ಕಾರ ಐಎಎಸ್ನಿಂದ ವಜಾಗೊಳಿಸಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೂಜಾ ಖೇಡ್ಕರ್ ಅವರನ್ನು ಭಾರತೀಯ ಆಡಳಿತ ಸೇವೆಗಳಿಂದ ಕೂಡಲೇ ಜಾರಿಯಾಗುವಂತೆ ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಪೂಜಾ ಅವರ ನೇಮಕಾತಿಯನ್ನು ರದ್ದುಗೊಳಿಸಿದ ಸುಮಾರು ಒಂದು ತಿಂಗಳ ಬಳಿಕ ಕೇಂದ್ರದ ನಿರ್ಧಾರ ಪ್ರಕಟವಾಗಿದೆ.
ಪೂಜಾ ಅವರು ಯುಪಿಎಸ್ಸಿ ನೇಮಕಾತಿಯಲ್ಲಿನ ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಹಾಗೂ ಅಂಗವೈಕಲ್ಯ ಕೋಟಾದ ಪ್ರಯೋಜನಗಳನ್ನು ಪಡೆಯಲು ಸುಳ್ಳು ದಾಖಲೆಗಳನ್ನು ಒದಗಿಸಿ ವಂಚನೆ ಎಸಗಿರುವುದು ಕಂಡು ಬಂದಿತ್ತು. ಹಾಗಾಗಿ, ಅವರ ಆಯ್ಕೆಯನ್ನು ರದ್ದುಗೊಳಿಸಿದ್ದ ಯುಪಿಎಸ್ಸಿ, ಅವರು ಜೀವನ ಪರ್ಯಂತ ಮತ್ತೆ ಪ್ರವೇಶ ಪರೀಕ್ಷೆ ತೆಗೆದುಕೊಳ್ಳದಂತೆ ನಿಷೇಧ ವಿಧಿಸಿದೆ.
ಅಂಗವೈಕಲ್ಯ ಹಾಗೂ ಒಬಿಸಿ ಕೋಟಾ ದುರುಪಯೋಗಪಡಿಸಿದ್ದಾರೆ ಎಂಬ ಪೂಜಾ ಖೇಡ್ಕರ್ ವಿರುದ್ದದ ಆರೋಪಗಳು ಸಾಬೀತಾಗಿರುವುದರಿಂದ ಅವರನ್ನು ಅನೂರ್ಜಿತಗೊಳಿಸಲಾಗಿದೆ ಎಂದು ಯುಪಿಎಸ್ಸಿ ಹೇಳಿತ್ತು.
ಇದೀಗ ಕೇಂದ್ರ ಸರ್ಕಾರವು ಸೆ. 6ರಂದು ಐಎಎಸ್ (ಪ್ರೊಬೇಷನ್ ) 1954ರ ನಿಯಮ 12ರ ಅಡಿಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪೂಜಾ ಅವರನ್ನು ಐಎಎಸ್ ಕರ್ತವ್ಯದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.