ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಮುಂದೂಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಒಂದು ರಾಷ್ಟ್ರ ಒಂದು ಚುನಾವಣೆ’ (ONOE) ಅಭಿಯಾನ ನಡೆಸುತ್ತಿದೆ ಎಂದು ಖ್ಯಾತ ಸುಪ್ರೀಂ ಕೋರ್ಟ್ ವಕೀಲ ಮತ್ತು ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.
ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.
”ಭಾರತದಂತಹ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಕಾರ್ಯಗತಗೊಳಿಸಲು ಸಾಧ್ಯವಿಲ್ಲ ಏಕೆಂದರೆ ನಮ್ಮ ವ್ಯವಸ್ಥೆಯಲ್ಲಿ ಸರ್ಕಾರವು ಬಹುಮತವನ್ನು ಕಳೆದುಕೊಂಡಾಗ ಮತ್ತು ಹೊಸ ಸರ್ಕಾರ ರಚನೆಯಾದಾಗ ಮಧ್ಯಂತರದಲ್ಲಿ ಬೀಳಬಹುದು. ‘ಒಂದು ರಾಷ್ಟ್ರ ಒಂದು ಚುನಾವಣೆ’ ಜಾರಿಯಾದರೆ, ಆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುವುದು, ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ” ಎಂದು ಭೂಷಣ್ ಪ್ರತಿಪಾದಿಸಿದರು.
”ಅಂದರೆ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ರಾಷ್ಟ್ರಪತಿ ಆಳ್ವಿಕೆಗೆ ಬದಲಾಗುತ್ತಿದ್ದೇವೆ. ಹಾಗಾಗಿ ಇದು ಸಂಸದೀಯ ಪ್ರಜಾಪ್ರಭುತ್ವದ ಸಂಪೂರ್ಣ ಉಲ್ಲಂಘನೆಯಾಗುತ್ತದೆ. ನನ್ನ ದೃಷ್ಟಿಯಲ್ಲಿ, ಈ ಬಗ್ಗೆ ಸರ್ಕಾರಕ್ಕೆ ಸ್ಪಷ್ಟವಾಗಿ ತಿಳಿದಿದೆ” ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು.
”ಈಗಿನ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತವಿಲ್ಲ. ಈ ಎಲ್ಲ ಸಂಗತಿಗಳು ಸರ್ಕಾರಕ್ಕೆ ತಿಳಿದಿತ್ತು. ಆದರೂ, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆಯನ್ನು ಮುಂದೂಡುವ ಒಂದೇ ಒಂದು ಉದ್ದೇಶದಿಂದ ಅವರು ಈ ಬಲೂನ್ (ಒಂದು ರಾಷ್ಟ್ರ ಒಂದು ಚುನಾವಣೆ) ಗಾಳಿಯಲ್ಲಿ ತೇಲಿಬಿಟ್ಟಿದ್ದಾರೆ.
”ಈ ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಭೀತಿಯಲ್ಲಿದೆ. ಹಾಗಾಗಿ, ಅವರು ಒಂದು ರಾಷ್ಟ್ರ ಒಂದು ಚುನಾವಣೆ ಹೆಸರಿನಲ್ಲಿ 2024ರ ಸಾರ್ವತ್ರಿಕ ಚುನಾವಣೆಯವರೆಗೆ ವಿಧಾನಸಭಾ ಚುನಾವಣೆಯನ್ನು ಮುಂದೂಡಲು ಹೊರಟಿದ್ದಾರೆ. ಅಲ್ಲಿಯವರೆಗೂ ಆ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆ” ಎಂದು ಅವರು ಹೇಳಿದರು.