ಭಾರತದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಾಣಿ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಕ್ಷಮೆಯಾಚನೆ ಮಾಡಿದ್ದಾರೆಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.
ರಾಷ್ಟ್ರಪತಿ ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ಮಹಿಳಾ ಆಯೋಗ ವಿಶ್ವೇಶರ ಭಟ್ ಅವರಿಗೆ ಖುದ್ದು ಹಾಜರಾಗುವಂತೆ ನೋಟಿಸ್ ನೀಡಿತ್ತು, ಅದರಂತೆ ಆಯೋಗದ ಮುಂದೆ ಹಾಜರಾದ ಅವರು, ರಾಷ್ಟ್ರಪತಿಗಳ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದೇನೆ ಎಂಬ ಆರೋಪ ಸುಳ್ಳು, ಪಕ್ಷಪಾತ, ಆಧಾರರಹಿತ ಮತ್ತು ಸತ್ಯಕ್ಕೆ ದೂರವಾದವು ಎಂದು ನಾನು ನಮ್ರತೆಯಿಂದ ಹೇಳುತ್ತೇನೆ ಎಂದಿದ್ದಾರೆ.
ಈ ಅಂಕಣವನ್ನು ಯಾರನ್ನೂ ನೋಯಿಸುವ ಉದ್ದೇಶದಿಂದ ಪ್ರಕಟಿಸಲಾಗಿಲ್ಲ, ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ನನಗೆ ಗೌರವವಿದೆ, ಅಂಕಣವು ನನ್ನ ಇತ್ತೀಚಿನ ಜೋರ್ಡಾನ್ ಪ್ರಯಾಣದ ಅನುಭವವನ್ನು ಆಧರಿಸಿದೆಯೇ ಹೊರತು ಸಾಮಾನ್ಯವಾಗಿ ಯಾವುದೇ ವ್ಯಕ್ತಿ ಅಥವಾ ನಿರ್ದಿಷ್ಟವಾಗಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ ಅಲ್ಲ ಎಂದು ಅವರು ಮಹಿಳಾ ಆಯೋಗಕ್ಕೆ ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ.