ಜಾನುವಾರುಗಳಲ್ಲಿ ಚರ್ಮಗಂಟು ರೋಗ ವ್ಯಾಪಾಕವಾಗಿ ಹರಡುತ್ತಿರುವ ಹಿನ್ನೆಲೆ ಮೈಸೂರು ಜಿಲ್ಲೆಯಾದ್ಯಂತ ನಡೆಯುವ ಜಾನುವಾರು ಜಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮೈಸೂರು ಜಿಲ್ಲಾಡಳಿತದ ಆದೇಶದ ಮೇರೆಗೆ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಜಾನುವಾರು ಜಾತ್ರೆ, ಟಿ. ನರಸೀಪುರ ತಾಲೂಕಿನ ಮುಡುಕುತೊರೆ ಜಾನುವಾರು ಜಾತ್ರೆ, ನಂಜನಗೂಡು ತಾಲೂಕಿನ ಸುತ್ತೂರಿನ ಜಾನುವಾರು ಜಾತ್ರೆಗಳು ಈ ವರ್ಷ ರದ್ದಾಗಿವೆ.
ಚುಂಚನಕಟ್ಟೆ ಜಾನುವಾರು ಜಾತ್ರೆಯು ರಾಜ್ಯದ ಪ್ರಸಿದ್ಧ ಜಾತ್ರೆಯಾಗಿದ್ದು, ಇಲ್ಲಿಗೆ ರಾಜ್ಯದ ವಿವಿಧ ಭಾಗಗಳಿಂದ ಜಾನುವಾರುಗಳನ್ನು ಮಾರುವವರು ಮತ್ತು ಕೊಳ್ಳುವವರು ಬರುವುದು ಪ್ರತೀತಿಯಾಗಿದೆ. ಜಾನುವಾರುಗಳು ಒಂದೆಡೆ ಸೇರುವುದರಿಂದ ರೋಗ ಉಲ್ಬಣಿಸುವ ಸಾಧ್ಯತೆಗಳಿದ್ದು, ಜಾನುವಾರು ಜಾತ್ರೆಯನ್ನು ರದ್ದು ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. “ಚರ್ಮಗಂಟು ರೋಗ ಹತೋಟಿಗೆ ತರಲು ಹಾಗೂ ಜಾನುವಾರು ಸಂಪತ್ತನ್ನು ರಕ್ಷಿಸುವ ಉದ್ದೇಶದಿಂದ ಮೈಸೂರು ಜಿಲ್ಲೆಯಾದ್ಯಂತ ನಡೆಯುವ ಜಾನುವಾರು ಜಾತ್ರೆಗಳಿಗೆ ನಿರ್ಬಂಧ ಹೇರಲಾಗುತ್ತಿದೆ” ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
“ಕೇವಲ 28 ದಿನಗಳ (ಡಿ.4ರಿಂದ ಡಿ.31ರವರೆಗೆ) ಅಂತರದಲ್ಲಿ ಕೆ.ಆರ್.ನಗರ ತಾಲೂಕಿನಲ್ಲಿ 34 ಜಾನುವಾರುಗಳು ರೋಗಕ್ಕೆ ಬಲಿಯಾಗಿವೆ. ಅಲ್ಲದೆ, ಹೊಸ ಪ್ರಕರಣಗಳು ದಾಖಲಾಗಿವೆ. ಪಶು ವೈದ್ಯಾಧಿಕಾರಿಗಳ ಸಭೆ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ” ಎಂದು ಜಿಲ್ಲಾಡಳಿತ ತಿಳಿಸಿದೆ.