ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದರ ಮೂಲಕ ತಮ್ಮ ಪ್ರಾಣವನ್ನು ರಕ್ಷಣೆ ಮಾಡಿಕೊಳ್ಳಬೇಕೆಂದು ಡಿವೈಎಸ್ಪಿ ವಿ.ಕೃಷ್ಣಪ್ಪ ತಿಳಿಸಿದರು.
ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಪಟ್ಟಣದ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಹೆಲ್ಮೆಟ್ ಮತ್ತು ಇತರೆ ಸಂಚಾರ ಸುರಕ್ಷತಾ ಉಪಕರಣಗಳ ಬಳಕೆ ಬಗ್ಗೆ ಆಯೋಜಿಸಿದ ಜಾಗೃತಿ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಸಾವಿರಾರು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ, ಹೆಲ್ಮೆಟ್ ಧರಿಸಿದರೇ ಪ್ರಾಣ ರಕ್ಷಣೆಗೆ ಸಹಾಯವಾಗುತ್ತದೆ. ವಾಹನ ಸವಾರರು ಕಡ್ಡಾಯವಾಗಿ ರಸ್ತೆ ನಿಯಮ ಪಾಲನೆ ಮಾಡಬೇಕು, ನಿಮ್ಮ ಜೀವವನ್ನು ನೀವೇ ರಕ್ಷಣೆ ಮಾಡಿಕೊಳ್ಳಬೇಕಿದೆ, ಹೆಲ್ಮೆಟ್ ಇಲ್ಲದೆ ಸಾವು-ನೋವು ಸಂಭವಿಸುತ್ತಿರುವುದು ನಮ್ಮ ಕಣ್ಮುಂದೆಯೇ ನಡೆಯುತ್ತಿವೆ, ಅಲ್ಲದೇ ಕಾರು ಚಾಲನೆಯ ವೇಳೆ ಸೀಟ್ ಬೆಲ್ಟ್ ಧರಿಸಬೇಕೆಂದು ಸಲಹೆ ನೀಡಿದರು.
ರಸ್ತೆಯಲ್ಲಿ ಸಂಚರಿಸುವ ವಾಹನಗಳಲ್ಲಿ ದ್ವಿಚಕ್ರ ವಾಹನಗಳೇ ಹೆಚ್ಚು ಅಪಾಯಕ್ಕೆ ಒಳಗಾಗುತ್ತವೆ. ಇತ್ತೀಚಿನ ದಿನಗಳಲ್ಲಿ ವಾಹನ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುವವರಲ್ಲಿ ದ್ವಿಚಕ್ರ ವಾಹನ ಸವಾರರ ಸಂಖ್ಯೆ ಹೆಚ್ಚಾಗಿದೆ. ತಲೆಗೆ ಬೀಳುವ ಬಲವಾದ ಪೆಟ್ಟಿನಿಂದ ಬಹುತೇಕರು ಸಾವನ್ನಪ್ಪಿದ್ದಾರೆ. ಹೀಗಾಗಿ ಗುಣಮಟ್ಟದ ಹೆಲ್ಮೆಟ್ ಧರಿಸುವ ಮೂಲಕ ವಾಹನ ಸವಾರರು ಜಾಗೃತಿ ವಹಿಸಬೇಕೆಂದು ಸಲಹೆ ನೀಡಿದರು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ತಮ್ಮ ದ್ವಿಚಕ್ರ ವಾಹನಗಳಲ್ಲಿ ಶಿಸ್ತುಬದ್ಧವಾಗಿ ಹೆಲ್ಮೆಟ್ ಧರಿಸಿ ಸಂಚಾರ ನಡೆಸಿ ಜನರ ಗಮನ ಸೆಳೆಯುವುದರ ಜತೆಗೆ ಸಂಚಾರಿ ನಿಯಮ ಪಾಲಿಸುವಂತೆ ಸಂದೇಶ ನೀಡಿದರು.
ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೇಕ್ಟರ್ ಎಂ.ರವಿಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ.ಜಿ.ಮಹೇಶ್, ಪಿಎಸ್ಐಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.