ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಸೇವೆ ಮಾಡಿ ದಹನ ಮಾಡುವ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತೆಯರು ಭಾನುವಾರ ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ನ ಮಹಿಳಾ ಘಟಕದ ಆಶ್ರಯದಲ್ಲಿ ಕಾರ್ಯಕರ್ತೆಯರು ಧರಣಿ ನಡೆಸಿ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಕಿಡಿಕಾರಿದರು.
ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಪ್ರತಿಕೃತಿ ದಹಿಸಿ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರಕಿಸಿ ಕೊಡುವಂತೆ ಒತ್ತಾಯಿಸಿದರು.
ಹಾಸನದಲ್ಲಿ ಪೆನ್ ಡ್ರೈವ್ ಪ್ರಕರಣ ಹೊರ ಬಂದ ನಂತರ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ, ವಿದೇಶಕ್ಕೆ ಪರಾರಿಯಾಗಿ ಅಡಗಿ ಕುಳಿತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯದ ಎಲ್ಲಡೆ ಜನಾಕ್ರೋಶ ವ್ಯಕ್ತವಾಗಿದೆ, ಈತನ ತಂದೆ ಎಚ್ ಡಿ ರೇವಣ್ಣ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿದ್ದು, ಇದೀಗ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ಬಂಧನ ಮಾಡಿದೆ, ಅದೇ ರೀತಿ ಸಂಸದ ಪ್ರಜ್ವಲ್ ರೇವಣ್ಣನನ್ನ ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಮಹಿಳಾ ಕುಲಕ್ಕೆ ದೊಡ್ಡ ಅವಮಾನ ಮಾಡಿರುವ ಪ್ರಜ್ವಲ್ ರೇವಣ್ಣ ನನ್ನ ನಾಗರಿಕ ಸಮಾಜ ಕ್ಷಮಿಸುವುದಿಲ್ಲ, ಆತ ಮಾಡಿರುವ ಕೃತ್ಯಕ್ಕೆ ಜನರು ಕ್ಷಮಿಸುವುದಿಲ್ಲ,ಆತನನ್ನ ಶೀಘ್ರವಾಗಿ ಬಂಧಿಸಿ ವಿಚಾರಣೆ ನಡೆಸಿ ಸಾಕ್ಷಿ ನಾಶಕ್ಕೆ ಅವಕಾಶ ಮಾಡಿಕೊಡದೆ ಶಿಕ್ಷೆ ನೀಡಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್, ಇಂದಿರಾ ಸತೀಶ್ ಬಾಬು, ಅನುರಾಧ, ವೀಣಾ, ಶಕುಂತಲಾ, ಶಾಂಭವಿ, ನಗರಸಭಾ ಸದಸ್ಯರಾದ ಗೀತಾ, ಶ್ರೀಧರ್, ಸಿಎಂ ದ್ಯಾವಪ್ಪ, ಪ್ರಶಾಂತ್ ಬಾಬು, ಕನ್ನಲಿ ಚೆನ್ನಪ್ಪ ನೇತೃತ್ವ ವಹಿಸಿದ್ದರು.