ಕಾವೇರಿ ವಿಚಾರದಲ್ಲಿ ರೈತರಿಗೆ ನಿರಂತರ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ವೃತ್ತಿಪರ ಛಾಯಾಗ್ರಾಹಕರು ಮಂಡ್ಯದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಾಂಡವ್ಯ ವೃತ್ತಿಪರ ಛಾಯಾಚಿತ್ರಗ್ರಾಹಕರ ಸಂಘದ ನೇತೃತ್ವದಲ್ಲಿ ಸ್ಟುಡಿಯೋಗಳನ್ನು ಬಂದ್ ಮಾಡಿ ಕಾವೇರಿ ಹೋರಾಟಕ್ಕೆ ವೃತ್ತಿಪರ ಛಾಯಾಗ್ರಾಹಕರು ಬೆಂಬಲ ಸೂಚಿಸಿದರು.
ಮಂಡ್ಯ ನಗರದ ಸಿಲ್ವರ್ ಪಾರ್ಕಿನಿಂದ ಮೆರವಣಿಗೆ ಹೊರಟು ಸಂಜಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿ, ನಂತರ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಧರಣಿ ಸ್ಥಳಕ್ಕೆ ತೆರಳಿ ಬೆಂಬಲಿಸಿದರು.
ರೈತರಿಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ತೀರ್ಪು ಮಾರಕವಾಗಿದೆ, ಮಳೆ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆ ಇದೆ, ಆದರೂ ಸಹ ತಮಿಳುನಾಡಿಗೆ ನೀರು ಹರಿಸುತ್ತಿರುವುದು ರೈತರಿಗೆ ಮಾಡಿದ ದ್ರೋಹವಾಗಿದೆ ಎಂದು ಕಿಡಿಕಾರಿದರು.
ಮಾಂಡವ್ಯ ವೃತ್ತಿಪರ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷ ಉಮೇಶ್, ಉಪಾಧ್ಯಕ್ಷ ಕಾರ್ತಿಕ್, ಕಾರ್ಯದರ್ಶಿ ರೂಬಿನ್, ಮಹೇಶ್, ಲಕ್ಷ್ಮಣ್ ಪಟೇಲ್, ಬಾಬು, ಜಗದೀಶ್, ಮಾಜಿ ಅಧ್ಯಕ್ಷರಾದ ಬಾಲು, ಮಧುಚಂದ್ರ ಮತ್ತಿತರರು ಭಾಗವಹಿಸಿದ್ದರು.