Friday, September 20, 2024

ಪ್ರಾಯೋಗಿಕ ಆವೃತ್ತಿ

ಪುನೀತ್ ಕೆರೆಹಳ್ಳಿ ವಿರುದ್ದ ಆತ್ಮಹತ್ಯೆ ಯತ್ನ ಸೇರಿದಂತೆ ಮತ್ತೆರಡು ಎಫ್ಐಆರ್ ದಾಖಲು

ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಂಗಳೂರು ಪೊಲೀಸರು ಹೊಸದಾಗಿ ಮತ್ತೆ ಎರಡು ಪ್ರಕರಣ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಯತ್ನ ಆರೋಪದಡಿ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಮತ್ತು ಕಾನೂನು ವ್ಯವಸ್ಥೆಗೆ ಧಕ್ಕೆ ತಂದ ಆರೋಪದಡಿ ವಿ ವಿ ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಮ್ಮ ವಿರುದ್ಧ ರೌಡಿಪಟ್ಟಿ ತೆರೆದಿರುವುದಕ್ಕೆ ರಾಜ್ಯ ಸರಕಾರ ಸ್ಪಷ್ಟೀಕರಣ ನೀಡಬೇಕೆಂದು ಆಗ್ರಹಿಸಿ ಪುನೀತ್‌ ಕೆರೆಹಳ್ಳಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಈ ನಡುವೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣಕ್ಕೆ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.

ಆಸ್ಪತ್ರೆಯಲ್ಲಿರುವ ಪುನೀತ್‌ ಕೆರೆಹಳ್ಳಿ, ‘ಸರಕಾರ ಸ್ಪಷ್ಟನೆ ನೀಡುವವರೆಗೂ ಆಹಾರ ಹಾಗೂ ನೀರು ಸೇವಿಸುವುದಿಲ್ಲ. ಬೇಕಿದ್ದರೆ ಪ್ರಾಣ ಹೋಗಲಿ. ಚಿಕಿತ್ಸೆ ಸಹ ಪಡೆದುಕೊಳ್ಳುವುದಿಲ್ಲ’ ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಅವರ ವಿರುದ್ಧ ಆತ್ಮಹತ್ಯೆ ಯತ್ನ ಆರೋಪದಡಿ ದೂರು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಟೋಬರ್‌ 7ರಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದ ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರ ಎದುರು ಪುನೀತ್‌ ಕೆರೆಹಳ್ಳಿ, ಸರಕಾರಿ ಬಸ್‌ಗೆ ಬೆಂಕಿ ಹಚ್ಚುತ್ತೇನೆ ಹಾಗೂ ವಿಧಾನಸೌಧಕ್ಕೆ ಕಲ್ಲು ಹೊಡೆಯುತ್ತೇನೆ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದರು. ಈ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿಯು ದೂರು ಕೊಟ್ಟಿತ್ತು. ಈ ದೂರು ಆಧರಿಸಿ ಪುನೀತ್‌ ವಿರುದ್ಧ ಕಾನೂನು ವ್ಯವಸ್ಥೆಗೆ ಧಕ್ಕೆ ತಂದ ಆರೋಪದಡಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!