ಚಿತ್ರದುರ್ಗದಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ್ದಕ್ಕೆ ಜೆಡಿಎಸ್ ಪಕ್ಷವನ್ನು ಸೇರಿರುವ ರಘು ಆಚಾರ್ ರಾಜ್ಯದ ವಿಶ್ವ ಕರ್ಮ ಜನಾಂಗಕ್ಕೆ ನೀಡಿರುವ ಕೊಡುಗೆ ಏನು ಎಂದು ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗದ ವಿಭಾಗದ ಕಾರ್ಯದರ್ಶಿ ಎಂ.ಈರಚಾರಿ ಪ್ರಶ್ನಿಸಿದರು.
ನಾಗಮಂಗಲದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಾಗೂ ಮುಖಂಡರ ಬಗ್ಗೆ ಅವರು ನೀಡಿರುವ ಹೇಳಿಕೆಗಳು ಸತ್ಯಕ್ಕೆ ದೂರವಾಗಿವೆ. ವಿಶ್ವಕರ್ಮ ಜನಾಂಗಕ್ಕೆ ಕಾಂಗ್ರೆಸ್ ಪಕ್ಷದಲ್ಲಿ 60 ವರ್ಷಗಳ ಇತಿಹಾಸವಿದೆ. ಕಾಂಗ್ರೆಸ್ ಪಕ್ಷ ನಮ್ಮ ಜನಾಂಗಕ್ಕೆ ಅಪಾರವಾದ ಕೊಡುಗೆ ನೀಡಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರ ಆಡಳಿತದ ಅವಧಿಯಲ್ಲಿ ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪಿಸಿ ₹ 25 ಕೋಟಿ ಅನುದಾನ ನೀಡಿದ್ದಾರೆ ಎಂದರು.
ಅಮರ ಶಿಲ್ಪಿ ಜಕಣಚಾರ್ಯ ಪ್ರತಿಮೆ ಅನಾವರಣಗೊಳಿಸಿ ಸಂರಕ್ಷಣಾ ದಿನಾಚರಣೆ ಆಚರಣೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿರುವುದು ಕಾಂಗ್ರೆಸ್ ಸರ್ಕಾರ, ರಘುಚಾರ್ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಎಂ ಎಲ್ ಸಿ ಆಗಿದ್ದರು, ಅವರು ವಿಶ್ವಕರ್ಮ ಜನಾಂಗದ ಒಬ್ಬನೇ ಒಬ್ಬ ವ್ಯಕ್ತಿಗೂ ಪಕ್ಷದ ಸದಸ್ಯತ್ವ ಮಾಡಿಸಿಕೊಡದೆ ಕಾಂಗ್ರೆಸ್ ಪಕ್ಷದ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಸ್ವಯಂ ಬೆಳವಣಿಗೆಗೆ ಸೀಮಿತರಾಗಿದ್ದಾರೆ ಎಂದು ದೂರಿದರು.
ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ವಿಶ್ವಕರ್ಮ ಜನಾಂಗದವರನ್ನ ಗುರುತಿಸಿದವರು ಚಲುವರಾಯಸ್ವಾಮಿ, ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಒಮ್ಮತ ಬೆಂಬಲ ಸೂಚಿಸುತ್ತೇವೆ ಎಂದರು.