ಮಳೆಯಿಂದ ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿರುವ ಹಿನ್ನಲೆಯಲ್ಲಿ ಇದೇ ಮೇ.23 ಅಥವಾ 24ರಂದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆ ಕರೆಯುವುದಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರಿಗೆ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಮಳೆಯಿಂದಾಗಿರುವ ಹಾನಿಯ ಬಗ್ಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸಚಿವರಿಗೆ ಪತ್ರ ಬರೆದು ಗಮನ ಸೆಳೆದಿದ್ದರು. ಈ ಪತ್ರಕ್ಕೆ ಸ್ಪಂದನೆ ನೀಡಿರುವ ಸಚಿವರು ಶುಕ್ರವಾರ ಶಾಸಕ ದಿನೇಶ್ ಗೂಳಿಗೌಡ ಅವರಿಗೆ ದೂರವಾಣಿಯಲ್ಲಿ ಈ ಕುರಿತು ಚರ್ಚಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಮಳೆಹಾನಿ ಬಗ್ಗೆ ತಮಗೂ ಗಮನಕ್ಕೆ ಬಂದಿದ್ದು, ಈ ಸಂಬಂಧ ಮೇ 23 ಇಲ್ಲವೇ 24ರಂದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಪರಿಹಾರದ ಸಂಬಂಧ ಚರ್ಚೆ ನಡೆಸಲಾಗುವುದು. ಅದಕ್ಕಿಂತ ಮೊದಲು ಎಲ್ಲರೊಂದಿಗೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಲಾಗುವುದು ಎಂದು ಸಚಿವರು ತಿಳಿಸಿದ್ದಾಗಿ ದಿನೇಶ್ ಗೂಳೀಗೌಡ ಹೇಳಿದರು.