-
ದುರುದ್ದೇಶಪೂರ್ವಕವಾಗಿ ನಾಟಕ ತಿರುಚಿದ ಆರೋಪ
- ಡಿ.ಕೆ.ಶಿವಕುಮಾರ್ ಬಗ್ಗೆ ‘ಕೆಡಿ ಅಂಕಲ್’ ಎಂದು ವ್ಯಂಗ್ಯ
ಮೈಸೂರಿನ ರಂಗಾಯಣದಲ್ಲಿ ಮೊನ್ನೆ ಶನಿವಾರ ನಡೆದ ನಾಟಕ ಪ್ರದರ್ಶನದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ದೂರು ದಾಖಲಿಸಿದ್ದಾರೆ.
ಸಿದ್ದರಾಮಯ್ಯನವರನ್ನು ಅವಹೇಳನ ಮಾಡಿದ್ದಾರೆಂದು ರಂಗಾಯಣದ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳ ವಿರುದ್ಧ ಮೈಸೂರಿನ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
“ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕವನ್ನು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ‘ನಾಗರತ್ನಮ್ಮ’ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ಪ್ರದರ್ಶಿಸುತ್ತಿದ್ದರು. ನಾಟಕದಲ್ಲಿ ‘ಭಾಗ್ಯಗಳನ್ನು ನೀಡಿ ಸೋಮಾರಿ ಮಾಡುತ್ತಿದ್ದೀರಿ, ಬರೀ ನಿದ್ದೆ ಮಾಡುತ್ತಿದ್ದೀರಿ’ ಎಂದೆಲ್ಲ ಹೇಳಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡಲಾಗಿದೆ. ಮೂಲ ನಾಟಕವನ್ನು ತಿರುಚಿ ದುರುದ್ದೇಶಪೂರ್ವಕವಾಗಿ ನಾಟಕ ರೂಪಿಸಲಾಗಿದೆ” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
“ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ‘ಕೆಡಿ ಅಂಕಲ್’ ಎಂದು ವ್ಯಂಗ್ಯ ಮಾಡಲಾಗಿದೆ. ನಾಟಕ ತಂಡದಲ್ಲಿದ್ದ 18 ಮಂದಿ ವಿರುದ್ಧ ಭಾನುವಾರ ದೂರು ನೀಡಿದ್ದೇನೆ. ಚುನಾವಣೆ ಸಮೀಪಿಸುತ್ತಿರುವುದರಿಂದಾಗಿ, ಸಿದ್ದರಾಮಯ್ಯ ಅವರನ್ನು ಉದ್ದೇಶಪೂರ್ವಕವಾಗಿ ಅವಹೇಳನ ಮಾಡಲಾಗಿದೆ. ಈ ಬಗ್ಗೆ ಕಾನೂನು ಕ್ರಮ ಜರುಗಿಸಬೇಕು” ಎಂದು ಬಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.