Friday, September 20, 2024

ಪ್ರಾಯೋಗಿಕ ಆವೃತ್ತಿ

ಮೈಶುಗರ್ ಕಾರ್ಖಾನೆಯಲ್ಲಿ 1.68 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ: ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಗೆ ಮುಕುಟದಂತಿರುವ ಮೈಸೂರು ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಮತ್ತು ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ರೂ 50 ಕೋಟಿ ಅನುದಾನ ನೀಡಿದೆ. ಜಿಲ್ಲೆಯ ರೈತರ ಮತ್ತು ಜನಪ್ರತಿನಿಧಿಗಳ ಸಹಕಾರದಿಂದ 2.41 ಲಕ್ಷ ಮೆಟ್ರಿಕ್‌ಟನ್ ಕಬ್ಬನ್ನು ನುರಿಸಿ, 1.68 ಲಕ್ಷ ಕ್ವಿಂಟಾಲ್ ಸಕ್ಕರೆ ಉತ್ಪಾದಿಸಲಾಗಿರುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ 75ನೇ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನಮ್ಮ ದೇಶವನ್ನು ಬ್ರಿಟಿಷರ ಕಪಿಮುಷ್ಠಿಯಿಂದ 1947 ಆಗಸ್ಟ್ 15 ರಂದು ಮುಕ್ತಿಗೊಳಿಸಿದರೂ ಸಹಾ ಭಾರತೀಯರೆಲ್ಲರಿಗೂ ನಮ್ಮದೇ ಆದ ಆಡಳಿತ ವ್ಯವಸ್ಥೆ ಮತ್ತು ಸಂವಿಧಾನ ಇರಲಿಲ್ಲ. ನಮ್ಮದೇ ಆದ ಭೌಗೋಳಿಕ ವ್ಯವಸ್ಥೆಗೆ ಸಂವಿಧಾನದ ಅಗತ್ಯತೆಯನ್ನು ಮನಗಂಡು ನಮ್ಮ ದೇಶಕ್ಕೆ ವಿಶ್ವದಲ್ಲಿಯೇ ಅತಿದೊಡ್ಡ ಸಂವಿಧಾನವನ್ನು ಜಾರಿಗೊಳಿಸಿದ ದಿನವಾದ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನಾಗಿ ಭಾರತೀಯರಾದ ನಾವೆಲ್ಲರೂ ಹೆಮ್ಮೆಯಿಂದ ಆಚರಿಸುತ್ತೀದ್ದೇವೆ ಎಂದರು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದು, ರಾಷ್ಟ್ರದ ಸಾರ್ವಭೌಮತೆಯನ್ನು ಗೌರವಿಸಿ, ಅದನ್ನು ಎತ್ತಿಹಿಡಿಯುತ್ತೇವೆ. ನಮ್ಮದೇ-ದೇಶ, ನಮ್ಮದೇ-ಸಂವಿಧಾನ, ನಮ್ಮದೇ-ಆಡಳಿತ, ನಾವು ಸ್ವತಂತ್ರರಾಗಿ ಬದುಕುತ್ತೇವೆ ಎನ್ನುವ ಶಪಥವನ್ನು ಕೈಗೊಂಡ ದಿನವೇ ಗಣರಾಜ್ಯ ದಿನ. ಈ ದಿನ ಸಮಸ್ತ ಭಾರತೀಯರಿಗೆ ನಮಗೆ ಅತ್ಯಂತ ಪವಿತ್ರ ದಿನವಾಗಿದೆ ಎಂದು ಹೇಳಿದರು.

ಭಾರತೀಯರಾದ ನಾವೆಲ್ಲರೂ ಸಂವಿಧಾನದ ಮಹತ್ವವನ್ನು ಅರಿತುಕೊಳ್ಳಬೇಕಿದೆ. ಸಂವಿಧಾನದ ಮಹತ್ವ ಮತು ಅದರ ಪ್ರಾಮುಖ್ಯತೆಯನ್ನು ತಿಳಿಸುವ ಕುರಿತು ನಮ್ಮ ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಗಣರಾಜ್ಯ ದಿನದಂದೇ ರಾಜ್ಯಾದ್ಯಂತ ಚಾಲನೆ ನೀಡಲಾಗುತ್ತಿದೆ. ಇದೇ ರೀತಿ ನಮ್ಮ ಜಿಲ್ಲೆಯಲ್ಲಿಯೂ ಸಹ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದ್ದು, ಇಂದಿನಿಂದ ಫೆಬ್ರವರಿ 23 ರವರೆಗೆ ಜಿಲ್ಲೆಯ 233 ಗ್ರಾಮ ಪಂಚಾಯಿತಿಗಳಲ್ಲಿಯೂ ರಥ ಸಂಚರಿಸಲಿದೆ ಎಂದರು.

ಸರ್ಕಾರದ ಮೂಲ ಧ್ಯೇಯ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಅದರಲ್ಲೂ ಜನ ಸಾಮಾನ್ಯರ ಮತ್ತು ಹಿಂದುಳಿದ ವರ್ಗದವರ ಕನಿಷ್ಟ ಅವಶ್ಯಕತೆಗಳನ್ನು ಪೂರೈಸುವ ಆಶಯವನ್ನು ನಮ್ಮ ಸರ್ಕಾರ ಹೊಂದಿದೆ. ಅರ್ಥಿಕ ಸಬಲೀಕರಣ, ಮಹಿಳಾ ಸಬಲೀಕರಣ, ಸಾಮಾಜಿಕ ನ್ಯಾಯ ಮತ್ತು ಸಮಾನತೆ ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅದರಲ್ಲಿ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂಬ ಹೆಗ್ಗಳಿಕೆ ನಮ್ಮ ಸರ್ಕಾರಕ್ಕಿದೆ ಎಂದರು.

ಜಿಲ್ಲೆಯಲ್ಲಿ 3.58 ಕೋಟಿ ಮಹಿಳೆಯರಿಗೆ ಉಚಿತ ಪ್ರಯಾಣ

ಜಿಲ್ಲೆಯಲ್ಲಿ ಡಿಸೆಂಬರ್-2023 ರವರೆಗೆ ಒಟ್ಟು 3.58 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಮೂಲಕ ಶಕ್ತಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡಿರುತ್ತಾರೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿಯನ್ನು ದಾಸ್ತಾನು ರೂಪದಲ್ಲಿ ಹಾಗೂ 5 ಕೆ.ಜಿ ಅಕ್ಕಿಯನ್ನು ನಗದು ರೂಪದಲ್ಲಿ ನೀಡಲಾಗುತ್ತಿದ್ದು, ಡಿಸೆಂಬರ್-2023 ರ ಅಂತ್ಯಕ್ಕೆ ಒಟ್ಟು 4,36,510 ಫಲಾನುಭವಿಗಳಿಗೆ ರೂ 137.50 ಕೋಟಿ ಹಣವನ್ನು ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದರು.

ಗೃಹಜ್ಯೋತಿ ಯೋಜನೆಯಡಿ 4,64,303 ಗ್ರಾಹಕರು ಹೆಸರು ನೋಂದಣಿ ಮಾಡಿಸಿಕೊಂಡಿದ್ದು, ಡಿಸೆಂಬರ್-2023ರ ಅಂತ್ಯಕ್ಕೆ 8.90 ಕೋಟಿ ಯೂನಿಟ್ಸ್ ವಿದ್ಯುತ್‌ನ್ನು ಗ್ರಾಹಕರಿಗೆ ಉಚಿತವಾಗಿ ಒದಗಿಸಿ ರೂ. 76.22 ಕೋಟಿಗಳನ್ನು ಪಾವತಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಲ್ಲೆಯಲ್ಲಿ ಡಿಸೆಂಬರ್-2023 ರ ಅಂತ್ಯಕ್ಕೆ 4,35,820 ಮಹಿಳೆಯರಿಗೆ ತಲಾ ರೂ 2,000/-ಗಳಂತೆ ಒಟ್ಟು 89.17 ಕೋಟಿಗಳನ್ನು ಪಾವತಿಸಲಾಗಿದೆ. ಯುವನಿಧಿ ಯೋಜನೆಯಡಿ 2023 ನೇ ಸಾಲಿನಲ್ಲಿ ಉತ್ತೀರ್ಣರಾಗಿ 180 ದಿನಗಳು ಕಳೆದರೂ ಉದ್ಯೋಗ ಸಿಗದ ಡಿಪ್ಲೋಮೋ ಹಾಗೂ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಕ್ರಮವಾಗಿ ರೂ 1,500/- ಮತ್ತು 3,000/ ಗಳನ್ನು ನಿರುದ್ಯೋಗ ಭತ್ಯೆಯನ್ನು ಗರಿಷ್ಟ 2 ವರ್ಷಗಳ ಅವಧಿಯವರೆಗೆ ನೀಡಲಾಗುವುದು. ಜಿಲ್ಲೆಯಲ್ಲಿ ಈವರೆಗೆ 2,053 ಅರ್ಜಿಗಳು ನೋಂದಣಿಯಾಗಿರುತ್ತವೆ ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 4,600 ಕ್ಕೂ ಹೆಚ್ಚು ಕಂದಾಯ ನ್ಯಾಯಾಲಯ ಪ್ರಕರಣಗಳನ್ನು ಕಳೆದ 6 ತಿಂಗಳುಗಳಲ್ಲಿ ವಿಲೇವಾರಿ ಮಾಡುವ ಮೂಲಕ ಮಂಡ್ಯ ಜಿಲ್ಲೆಯು ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದರು.

ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ದಿ ಮತ್ತು ನಿರ್ವಹಣೆಗಾಗಿ ಪ್ರತಿಷ್ಟಾನ ರಚನೆ, ಮೇಲುಕೋಟೆ ಅಭಿವೃದ್ದಿ ಪ್ರಾಧಿಕಾರ ರಚನೆ ಮತ್ತು ಮಂಡ್ಯ ನಗರದ ಕಲಾಮಂದಿರ ನವೀಕರಣ ಸಂಬಂಧ ಕ್ರಮ ವಹಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!