ಮಳವಳ್ಳಿ ವಿಧಾನಸಭಾ ಮೀಸಲು ಕ್ಷೇತ್ರದಲ್ಲಿ ಬಲಗೈ ಸಮುದಾಯದ ಮತದಾರರಿರುವುದರಿಂದ ಬಿಜೆಪಿ ಪಕ್ಷ ಗೆಲ್ಲಲು ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಆಕಾಂಕ್ಷಿತರಿಗೆ ಟಿಕೆಟ್ ನೀಡಬೇಕೆಂದು ಜಿಲ್ಲಾಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಲಿಂಗಯ್ಯ ಒತ್ತಾಯಿಸಿದರು.
ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನಿಂದಲೂ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡುತ್ತಾ ಬರಲಾಗುತ್ತಿದೆ, ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬಲಗೈ ಸಮುದಾಯ ಹೊರತುಪಡಿಸಿ ಬೇರೆಯವರಿಗೆ ಟಿಕೆಟ್ ನೀಡುತ್ತಾರೆಂಬ ಚರ್ಚೆಗಳು ನಡೆಯುತ್ತಿದೆ. ಸಮುದಾಯದ ಜನಸಂಖ್ಯೆ ಎಲ್ಲಿ ಹೆಚ್ಚಾಗಿರುತ್ತದೋ ಅಲ್ಲಿ ನಿಲ್ಲಲಿ, ನಮ್ಮದೇನು ಅಭ್ಯಂತರವಿಲ್ಲ, ಆದರೇ ಮಳವಳ್ಳಿಯಲ್ಲಿ ಬಲಗೈ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಬಲಗೈ ಸಮುದಾಯದ ಆಕಾಂಕ್ಷಿತರಲ್ಲಿ ಯಾರಿಗಾದರೂ ಟಿಕೆಟ್ ನೀಡಿದರೆ ಚುನಾವಣೆ ಫಲಿತಾಂಶದಲ್ಲಿ ಮೇಲುಗೈ ಸಾಧಿಸಬಹುದಾಗಿದೆ ಎಂದರು.
ಹಲಗೂರು ಶಕ್ತಿ ಕೇಂದ್ರದ ಅಧ್ಯಕ್ಷ ರಾಜಣ್ಣ ಮಾತನಾಡಿ, ಮಳವಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಬಲಗೈ ಮತದಾರರು ಹೆಚ್ಚಾಗಿ ಇದ್ದಾರೆ, ಚುನಾವಣೆಯಲ್ಲಿ ಗೆಲ್ಲುವ ದೃಷ್ಠಿಯಿಂದ ಹಿಂದಿನಿಂದಲೂ ರೂಢಿಗತವಾಗಿ ಬಂದಿರುವ ಬಲಗೈ ಸಮುದಾಯಕ್ಕೆ ಬಿಜೆಪಿ ಟಿಕೆಟ್ ನೀಡಬೇಕೆಂದು ಮನವಿ ಮಾಡುತ್ತೇವೆ.ಮುಂದಿನ ದಿನಗಳಲ್ಲಿ ಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಬಲಗೈ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂದು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಬಿಜೆಪಿ ನಾಯಕರಲ್ಲಿ ಮನವಿ ಮಾಡಿಕೊಳ್ಳುತ್ತೇವೆಂದು ಹೇಳಿದರು.
ಗೋಷ್ಠಿಯಲ್ಲಿ ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ಬೆಳಕವಾಡಿ ಶಿವಣ್ಣ, ಕಿರುಗಾವಲು ಅನಿಲ್, ಚೊಟ್ಟನಹಳ್ಳಿ ಜಯರಾಮೇಗೌಡ, ಹುಸ್ಕೂರು ಸಿದ್ದೇಗೌಡ, ದೊಡ್ಡಭೂವಳ್ಳಿ ರಮೇಶ್, ಮಹೇಶ ಸೇರಿದಂತೆ ಇತರರಿದ್ದರು.