ಎಲ್ಲರ ವಿಶ್ವಾಸದಿಂದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದು, ದುದ್ದ ಹೋಬಳಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆಂದು ಶಾಸಕ ಸಿ.ಎಸ್.ಪುಟ್ಟರಾಜು ತಿಳಿಸಿದರು.
ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಶಿವಳ್ಳಿ ಗ್ರಾಮದಲ್ಲಿ “ಪಂಚರತ್ನ” ರಥಯಾತ್ರೆಯ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದ್ದು, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಅವರು ರಾಜ್ಯದ ಅಭಿವೃದ್ಧಿಗೆ ಚಿಂತಿಸಿ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಹಮ್ಮಿಕೊಂಡಿದ್ದಾರೆ. ಅದು ಮಳವಳ್ಳಿ ಮೂಲಕ 20 ರಂದು ಜಿಲ್ಲೆಗೆ ಪ್ರವೇಶ ಮಾಡಲಿದ್ದು, 23 ರಂದು ಮೇಲುಕೋಟೆ ಕ್ಷೇತ್ರ ವ್ಯಾಪ್ತಿಯ ಕಟ್ಟೇರಿ ಮೂಲಕ ರಥಯಾತ್ರೆ ಕ್ಷೇತ್ರಕ್ಕೆ ಆಗಮಿಸಲಿದೆ. ಅಂದು ಸಂಜೆ ಶಿವಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದ್ದು, ಕುಮಾರಸ್ವಾಮಿ ಅವರು ಶಿವಳ್ಳಿ ಗ್ರಾಮದಲ್ಲಿ ವಾಸ್ತವ್ಯ ಇರಲಿದ್ದಾರೆ ಎಂದರು.
ಕಳೆದ ಚುನಾವಣೆಯಲ್ಲಿ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಜಿಲ್ಲೆಯ ಮತದಾರರು ನೀಡಿದ ಬೆಂಬಲ ಹಾಗೂ ವಿಶೇಷವಾಗಿ ಮೇಲುಕೋಟೆ ಕ್ಷೇತ್ರದ ಮತದಾರರು ದಿ.ಪುಟ್ಟಣ್ಣಯ್ಯ ಅವರ ಸಾವಿನ ಅನುಕಂಪವನ್ನು ಮೆಟ್ಟಿ ನನ್ನನ್ನು ಜಯಗಳಿಸಿದ ಋಣ ತೀರಿಸಲು ನನ್ನ ಶಕ್ತಿ ಮೀರಿ ಶ್ರಮಿಸಿದ್ದೇನೆಂದರು.
ದುದ್ದ ಹೋಬಳಿ ವ್ಯಾಪ್ತಿಯ 58 ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಪೂರ್ಣಗೊಳ್ಳುತ್ತಿದ್ದು, ಅಧಿವೇಶನದ ಬಳಿಕ ಮುಖ್ಯಮಂತ್ರಿಗಳಿಂದ ಚಾಲನೆ ನೀಡಲಾಗುವುದು ಎಂದರು.
ರೈತರಿಗೆ ಅಗತ್ಯವಿರುವ ವಿದ್ಯುತ್ ಮತ್ತು ನೀರಾವರಿ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ಹಟ್ನ ಮತ್ತು ಬೇವುಕಲ್ಲು ಗ್ರಾಮ ವ್ಯಾಪ್ತಿಗೆ ಹೆಚ್ಚುವರಿಯಾಗಿ ವಿದ್ಯುತ್ ಸಬ್ಸ್ಟೇಷನ್ ಮಂಜೂ ರಾಗಿದ್ದು, ದುದ್ದ ವ್ಯಾಪ್ತಿಯ ಪ್ರಮುಖ ರಸ್ತೆಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ರೂ.ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಾನು ಮತದಾರರ ಮನೆ ಮಗನಂತೆ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರ ದ ಬಲವರ್ಧನೆಗೆ ಶ್ರಮಿಸಿ ದ್ದೇನೆ ಎಂದರು.
ವೇದಿಕೆಯಲ್ಲಿ ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಮುಖಂಡರಾದ ಮಲ್ಲಿಗೆರೆ ಮಾದೇಗೌಡ, ಯೋಗೇಶ್, ಭದ್ರಿ ನಾರಾಯಣ್, ವಿಶ್ವೇಶ್ವರಯ್ಯ, ಸುರೇಂದ್ರ ಶಿವರಾಮಣ್ಣ, ಬಾಲರಾಜು, ಮುದಗಂದೂರು ಗ್ರಾ.ಪಂ. ಅಧ್ಯಕ್ಷ ಶಂಕರೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.