ಕರ್ನಾಟಕದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಐವರು ಮುಖ್ಯಮಂತ್ರಿಗಳಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರು ಸಿ.ಎಂ, ಮತ್ತೊಬ್ಬರು ಸೂಪರ್ ಸಿಎಂ ಸೇರಿ ಐವರು ಮುಖ್ಯಮಂತ್ರಿಗಳು ಕಾರ್ಯನಿರ್ವಹಿಸುತ್ತಿದ್ದಾರೆಂದು ಗೋವಾ ರಾಜ್ಯದ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ವ್ಯಂಗ್ಯವಾಡಿದರು.
ಮಂಡ್ಯನಗರದ ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜನೆಗೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆ ಹಾಗೂ ಬಹಿರಂಗ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಭ್ರಷ್ಟಾಷಾರದ ಕೂಪವಾಗಿದೆ, ಈ ಸರ್ಕಾರವನ್ನು ನಿಯಂತ್ರಿಸಲು ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರ ನಡೆಸಲು ಹೆಚ್.ಡಿ.ಕುಮಾರಸ್ವಾಮಿ ಸೇರಿ 400 ಮಂದಿ ಎನ್.ಡಿ.ಎ ಸಂಸದರು ಆಯ್ಕೆಯಾಗಲು ಮತದಾರರು ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ವಿಧಾನಸಭಾ ಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದರೆ, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಅಸ್ತಿತ್ವದಲ್ಲಿ ಇರುತ್ತಿತ್ತು. ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳನ್ನು ರಾಜ್ಯದ 28 ಕ್ಷೇತ್ರಗಳಲ್ಲಿ ಚುನಾಯಿಸಿದರೆ, ರಾಜ್ಯದ ಅಭಿವೃದ್ದಿಯ ವೇಗ ಹೆಚ್ಚಾಗುತ್ತದೆ. ಅದಕ್ಕಾಗಿ ರಾಜ್ಯದ ಮತದಾರರು ಎನ್.ಡಿ.ಎ ಬೆಂಬಲಿಸುವ ಇತಿಹಾಸ ಸೃಷ್ಠಿಸಬೇಕಿದೆ ಎಂದರು.
ವಿಶ್ವ ನಾಯಕ ಮೋದಿ- ನಿಖಿಲ್
ಕಳೆದ 10 ವರ್ಷಗಳ ಅವಧಿಯಲ್ಲಿ ನಿರಂತರವಾಗಿ ದೇಶದ ಅಭಿವೃದ್ದಿಗೆ ಶ್ರಮಿಸುತ್ತಿರುವ ನರೇಂದ್ರ ಮೋದಿಯವರ ಕಾರ್ಯ ವೈಖರಿಯಿಂದ ದೇಶ ಅಭಿವೃದ್ದಿಪಥದಲ್ಲಿ ಸಾಗಿದ್ದು, ಆ ಮೂಲಕ ಪ್ರಧಾನಿ ಮೋದಿಯವರು ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಕಳೆದ 25 ವರ್ಷಗಳ ಸುದೀರ್ಘ ಕಾಲದ ಅವಧಿಯಲ್ಲಿ ರಾಜ್ಯದ ರೈತಾಪಿ ಜನರು ಮತ್ತು ಮಹಿಳೆಯರ ಅಭಿವೃದ್ದಿಗೆ ಪೂರಕವಾಗಿ ಶ್ರಮಿಸಿರುವ ಕುಮಾರಸ್ವಾಮಿ ಅವರ ಜನಬೆಂಬಲಕ್ಕೆ ಇಂದಿನ ಸಮಾವೇಶ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಉಭಯ ಪಕ್ಷಗಳ ಮೈತ್ರಿ ನಾಯಕರು ಹಾಗೂ ಮುಖಂಡರು ಯಾವುದೇ ಅಪಸ್ವರಕ್ಕೆ ಆಸ್ಪದ ಕೊಡದಂತೆ, ಸಭೆಯಲ್ಲಿ ಭಾಗಿಯಾಗಿದ್ದು, ಕ್ಷೇತ್ರದ ಜನರ ಆಶೀರ್ವಾದದಿಂದ ಕುಮಾರಸ್ವಾಮಿ ಅವರು ಸಂಸತ್ ಪ್ರವೇಶಿಸಿದರೆ ಕಾವೇರಿ ಸಮಸ್ಯೆ ಪರಿಹಾರಕ್ಕೆ ಶ್ರಮಿಸಲಿದ್ದಾರೆಂದು ತಿಳಿಸಿದರು.
ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ -ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಎಚ್.ಟಿ.ಮಂಜು, ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್.ವೀರಯ್ಯ, ಬೋಜೇಗೌಡ, ಮಾಜಿ ಸಚಿವರಾದ ಲೀಲಾದೇವಿ ಆರ್.ಪ್ರಸಾದ್, ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಕೆ.ಸಿ.ನಾರಾಯಣಗೌಡ, ಬಂಡೆಪ್ಪ ಕಾಶೆಂಪುರ, ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ, ಎ.ಎಸ್.ರವೀಂದ್ರ ಶ್ರೀಕಂಠಯ್ಯ, ಸಾ.ರಾ.ಮಹೇಶ್, ಕೆ.ಟಿ.ಶ್ರೀಕಂಠೇಗೌಡ, ಕೆ. ಸುರೇಶ್ ಗೌಡ, ಸುನೀಲ್ ಸುಬ್ರಹ್ಮಣ್ಯ, ಜಿ.ಬಿ.ಶಿವಕುಮಾರ್, ಆಶ್ವಿನ್, ಜಿ.ಪಂ. ಮಾಜಿ ಸದಸ್ಯ ಕೆ.ಎಸ್.ವಿಜಯಾನಂದ, ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಚಾಲಕ ಸಿ.ಪಿ.ಉಮೇಶ್, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಸಿದ್ದರಾಮಯ್ಯ, ಮನ್ ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಉಪಾಧ್ಯಕ್ಷ ಎಂ.ಎಸ್.ರಘುನಂದನ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಎಸ್.ಜೆ.ಅಶೋಕ್ ಜಯರಾಮ್, ನೆಲ್ಲಿಗೆರೆ ಬಾಲು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಮತ್ತಿತರರಿದ್ದರು.