ಐತಿಹಾಸಿಕ ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧ ಸಂಪೂರ್ಣವಾಗಿ ಹಾಳಾಗಿದ್ದು, ಸ್ವಾತಂತ್ರ್ಯ ಹೋರಾಟಕ್ಕೆ ಮುನ್ನುಡಿ ಬರೆದ ಜಿಲ್ಲೆಯ ಹೆಮ್ಮೆಯ ಸ್ಥಳ ಶಿವಪುರ ಧ್ವಜ ಸತ್ಯಾಗ್ರಹ ಸೌಧವನ್ನು ದುರಸ್ತಿ ಮಾಡಬೇಕೆಂದು ಹಿರಿಯ ಸಾಹಿತಿ ಡಾ.ಜಯಪ್ರಕಾಶ್ ಗೌಡ ಸಚಿವರನ್ನು ಒತ್ತಾಯಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಕೆಂಪೇಗೌಡರ ರಥಯಾತ್ರೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಕ್ಕೆ ಮಂಡ್ಯ ಜಿಲ್ಲೆ ಹಲವು ಹೋರಾಟಗಾರರನ್ನು ನೀಡಿದೆ. 1937ರಲ್ಲಿ ನಡೆದ ಧ್ವಜ ಸತ್ಯಾಗ್ರಹ ಸ್ವಾತಂತ್ರ್ಯ ಹೋರಾಟಕ್ಕೆ ಮುನ್ನುಡಿ ಬರೆದಿದೆ.
ನಮ್ಮ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥವಾಗಿ ಕೆಂಗಲ್ ಹನುಮಂತಯ್ಯನವರು ನಿರ್ಮಿಸಿದ್ದ ಶಿವಪುರ ಸತ್ಯಾಗ್ರಹ ಸೌಧ ನಿರ್ವಹಣೆ ಇಲ್ಲದೆ ಹಾಳಾಗಿದೆ. ಕಿಟಕಿ, ಬಾಗಿಲುಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ಮೊದಲು ಇದನ್ನು ದುರಸ್ತಿ ಮಾಡಿ ಎಂದು ಸಚಿವರಾದ ಕೆ.ಗೋಪಾಲಯ್ಯ ಹಾಗೂ ನಾರಾಯಣಗೌಡರಿಗೆ ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಸಚಿವ ಗೋಪಾಲಯ್ಯ ನ.8ರಂದು ಕೆಂಪೇಗೌಡರ ರಥಯಾತ್ರೆ ಮೂಲಕ ಸಂಗ್ರಹಿಸುವ ಪವಿತ್ರ ಮಣ್ಣಿಗೆ ಶಿವಪುರ ಸತ್ಯಾಗ್ರಹ ಸೌಧದಲ್ಲಿ ಪೂಜೆ ಸಲ್ಲಿಸಿದ ನಂತರ ಬಿಡುವು ಮಾಡಿಕೊಂಡು ದುರಸ್ತಿಯ ಸಂಬಂಧ ಚರ್ಚಿಸೋಣ ಎಂದು ತಿಳಿಸಿದರು.