ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿ ಪ್ರಸ್ತುತ ಸಿಎಂ ಆಯ್ಕೆ ಕಸರತ್ತು ನಡೆಯತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದೆ, ಈ ಸಂದರ್ಭದಲ್ಲೇ ಸಿದ್ದರಾಮಯ್ಯ ಅವರನ್ನೆ ಸಿಎಂ ಮಾಡಬೇಕೆಂದು ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್ ಹೈಕಮಾಂಡ್ ಮೇಲೆ ಪ್ರಭಾವ ಬೀರುತ್ತಿದ್ದಾರೆ.
ರಾಷ್ಟ್ರ ರಾಜಕಾರಣದಲ್ಲಿ ಮೋದಿಯನ್ನು ಎದುರಿಸಲು ಕ್ಲೀನ್ ಇಮೇಜ್ ಇರುವ ನಾಯಕ ಅಗತ್ಯವಿದೆ, ಇಡೀ ದಕ್ಷಿಣ ಭಾರತದಲ್ಲಿ ಹೆಚ್ಚು ಜನಪ್ರಿಯತೆ ಹೊಂದಿರುವ ನಾಯಕರೆಂದೇ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರನ್ನೇ ಕರ್ನಾಟಕ ಮುಖ್ಯಮಂತ್ರಿಯನ್ನಾಗಿಸಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಎನ್.ಸಿ.ಪಿ.ನಾಯಕ ಶರದ್ ಪವರ್ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೇರಿದಂತೆ ಹಲವರು ರಾಹುಲ್ ಗಾಂಧಿಯರಿಗೆ ದೂರವಾಣಿ ಕರೆ ಮಾಡಿ ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಇಂತಹ ಅಭೂತಪೂರ್ವ ಗೆಲುವನ್ನು ಯಾರು ನಿರೀಕ್ಷಿಸಿರಲಿಲ್ಲ, ಇಂತಹ ಫಲಿತಾಂಶ ಪಡೆಯಲು ಸಿದ್ದರಾಮಯ್ಯ ಅವರು ಹಿಂದಿನ ಸರ್ಕಾರದ ಕಾರ್ಯ ವೈಖರಿಯೇ ಕಾರಣವಾಗಿದೆ. ಅದ್ದರಿಂದ ಅವರನ್ನು ಮುಖ್ಯಮಂತ್ರಿ ಮಾಡಿದರೆ ರಾಷ್ಟ್ರಮಟ್ಟದಲ್ಲಿ ಮೋದಿಯವನ್ನು ಎದುರಿಸಲು ಸಾಧ್ಯವಾಗುತ್ತದೆ. ಅಲ್ಲದೇ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಿದ್ದರಾಮಯ್ಯ ವರ್ಚಸ್ಸಿನ ಅಗತ್ಯವಿದೆ, ಹಾಗಾಗಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಯಾಗಬೇಕೆಂದು ಹಲವು ರಾಷ್ಟ್ರೀಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದರೆ ಮಾತ್ರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ, ಇದರಿಂದ ಕಾಂಗ್ರೆಸ್ ಗೆ ಹೆಚ್ಚು ಲಾಭವಾಗುತ್ತದೆ. ದಕ್ಷಿಣ ಭಾರತದಲ್ಲಿ ಸಿದ್ದರಾಮಯ್ಯನವರಿಗೆ ಸರಿ ಸಮಾನನಾದ ಮುತ್ಸದಿ, ಜನಪ್ರಿಯ ನಾಯಕ ಮತ್ತೊಬ್ಬರಿಲ್ಲ ಎಂಬುದು ವಾಸ್ತವವಾಗಿದ್ದು, ಇದನ್ನು ಬಳಕೆ ಮಾಡಿಕೊಂಡಿದ್ದೆ ಆದರೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಹೊಸ ಚೈತನ್ಯ ಪಡೆಯಲಿದೆ ಎಂದು ಮಮತಾ ಬ್ಯಾನರ್ಜಿ ಈ ನಾಯಕರು ತಿಳಿಸಿದ್ದಾರೆ.
ಮೋದಿ ವಿರುದ್ದ ಸುನಾಮಿ ಅಲೆಯನ್ನು ಸೃಷ್ಠಿ ಮಾಡುವ ಸಾಮರ್ಥ್ಯವಿರುವ ಸಿದ್ದರಾಮಯ್ಯ, ಮೋದಿಯನ್ನು ಎದುರಿಸಬಲ್ಲ ಸಮರ್ಥ ನಾಯಕನಾಗಿದ್ದು, ಅವರನ್ನೇ ಮುಖ್ಯಮಂತ್ರಿ ಮಾಡಬೇಕೆಂದು ಅವರ ವಾದವಾಗಿದೆ.
ಸಿಎಂ ಹುದ್ದೆ ಯಾರಿಗೆ ಎಂದು ಅಂತಿಮವಾಗಿಲ್ಲ
ಕರ್ನಾಟಕದ ಸಿಎಂ ಹುದ್ದೆ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ, ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ, ಇನ್ನೂ ಒಂದೆರಡು ದಿನಗಳಲ್ಲಿ ಹೈಕಮಾಂಡ್ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಲೀಂ ಅಹಮದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿಸಿ, ಡಿ.ಕೆ.ಶಿವಕುಮಾರ್ ಅವರನ್ನು ಡಿಸಿಎಂ ಮಾಡಲು ಮನವೊಲಿಸುವುದಕ್ಕಾಗಿ ಎಐಸಿಸಿ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿಯವರು ಸೇರಿದಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಹಲವರು ಕಸರತ್ತು ನಡೆಸುತ್ತಿದ್ದು, ಇನ್ನು 72 ಗಂಟೆಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.