ರಾಜ್ಯದಲ್ಲಿ ಬಿಜೆಪಿ ಪಕ್ಷದ ಭ್ರಷ್ಟಾಚಾರ, ದುರಾಡಳಿತ ಹೆಚ್ಚಾಗಿದೆ. ದ್ವೇಷದ ರಾಜಕಾರಣ ಮಾಡುತ್ತಾ ಜನರನ್ನು ಮೇಲೆ ದೌರ್ಜನ್ಯ ನಡೆಸುತ್ತಿರುವ ಬಿಜೆಪಿ ಪಾಪದ ಕೊಳೆಯನ್ನು ಕಾಂಗ್ರೆಸ್ ಗುಡಿಸಿ ಸ್ವಚ್ಛ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಬುಧವಾರ ನಮನ ಸಲ್ಲಿಸಿ, ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮಿತಿಮೀರಿದೆ. ದ್ವೇಷದ ರಾಜಕಾರಣ ಮಾಡುತ್ತಿರುವ ಇವರನ್ನು ಯಾರಾದರೂ ಪ್ರಶ್ನೆ ಮಾಡಿದರೆ ಅವರ ಮೇಲೆ ಮೊಕದ್ದಮೆ ಹಾಕಿ ಜೈಲಿಗೆ ಹಾಕುತ್ತೇವೆಂದು ಹೆದರಿಸಲಾಗುತ್ತಿದೆ. ಹಲವರನ್ನು ಬಂಧಿಸಲಾಗಿದೆ. ದ್ವೇಷದ ರಾಜಕಾರಣದಿಂದಾಗಿ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು, ಮಹಿಳೆಯರು, ರೈತರು, ಕಾರ್ಮಿಕರು ಕೂಡ ಧೈರ್ಯದಿಂದ ಇರಲು ಸಾಧ್ಯವಾಗದ ವಾತಾವರಣ ನಿರ್ಮಾಣವಾಗಿದೆ. ಜನತೆ ಆತಂಕದಿಂದ ಬದುಕಬೇಕಾದ ಪರಿಸ್ಥಿತಿ ಇದೆ. ಬಿಜೆಪಿಯ ಪಾಪದ ಕೊಡ ತುಂಬಿದ್ದು, ಅವರ ಪಾಪದ ಕೊಳೆಯನ್ನು ಕಾಂಗ್ರೆಸ್ ಪಕ್ಷ ಗುಡಿಸಿ ಹಾಕಲಿದೆ ಎಂದರು.
ಬಿಜೆಪಿ ದ್ವೇಷದ ರಾಜಕಾರಣ ಮಿತಿಮೀರಿದೆ ರಾಜ್ಯದಲ್ಲಿ ಪ್ರಶ್ನೆ ಮಾಡಿರುವವರನ್ನು ಹುಡುಕಿ ಅವರ ಮೇಲೆ ಮೊಕದ್ದಮೆ ದಾಖಲಿಸುವುದು, ಹೆದರಿಸುವುದು ಬಂಧಿಸುವುದು ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಇವರ ಬೆದರಿಕೆಗೆ ಮಣಿಯುವುದಿಲ್ಲ. ಜನತೆಗೆ ಬಿಜೆಪಿಯ ಭ್ರಷ್ಟಾಚಾರ ದುರಾಡಳಿತದ ಬಗ್ಗೆ ಮನವರಿಕೆ ಮಾಡಿಕೊಡಲು ಈ ಪ್ರಜಾ ಧ್ವನಿ ಯಾತ್ರೆ ನಡೆಯುತ್ತಿದೆ ಎಂದರು.
ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್,ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್, ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಮ್ ಅಹ್ಮದ್, ಹಿರಿಯ ಮುಖಂಡ ಆರ್. ವಿ.ದೇಶಪಾಂಡೆ ಅವರು ಪ್ರಜಾಧ್ವನಿ ಬಸ್ ಯಾತ್ರೆ ಆರಂಭಕ್ಕೆ ಮೊದಲು ಬೆಳಗಾವಿಯ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ನಮನ ಸಲ್ಲಿಸಿದರು. ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಮತ್ತಿತರರಿದ್ದರು.