ಭಾಗ್ಯಗಳ ಸರದಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 76ನೇ ಹುಟ್ಟುಹಬ್ಬವನ್ನು ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಣೆ ಮಾಡಿದರು.
ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಸೇವಾಕಾರ್ಯ ಮತ್ತು ವಿಶೇಷಪೂಜಾ ಕಾರ್ಯಕ್ರಗಳನ್ನು ಕೈಗೊಂಡರು. ಮಂಡ್ಯ ನಗರದ ವಿದ್ಯಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು- ಹಂಪಲು ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿದರು.
ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ಮಾತನಾಡಿ, ಪ್ರಸ್ತುತ 2023ನೇ ಸಾಲಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನತೆ ಸಿದ್ದರಾಮಯ್ಯ ಅವರ ಮೇಲೆ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ಸ್ಪಷ್ಟಬಹುಮತದ ಸರ್ಕಾರ ರಚನೆಗೆ ಕಾರಣರಾಗಿ 2 ನೇ ಭಾರಿ ಮುಖ್ಯಮಂತ್ರಿಯನ್ನಾಗಿಸಿದ್ದಾರೆ.
ಜನರಿಗೆ ಕೊಟ್ಟಮಾತಿನಂತೆಯೇ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ನೆಮ್ಮದಿಯ ಬದುಕು
ಸಿದ್ದರಾಮಯ್ಯ ಅವರು ಬಡವರ ಪರ ಗಟ್ಟಿನಿರ್ಧಾರ ತೆಗೆದುಕೊಂಡು ವಿರೋಧಿಗಳೂ ಗೌರವಿಸುವಂತಹ ಕಾರ್ಯ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಜನಪ್ರಿಯ ಯೋಜನೆಗಳಿಂದ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಅವರು ಸಿದ್ದರಾಮಯ್ಯ ಉತ್ತಮ ಆಡಳಿತಗಾರರಾಗಿ ಮುಂದಿನ ದಿನಗಳಲ್ಲಿ ರಾಜ್ಯವನ್ನು ಒಳ್ಳೆಯ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಲು ದೇವರು ಅವರಿಗೆ ಆಯಸ್ಸು ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಮಾತನಾಡಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಇನ್ನು ಹೆಚ್ಚಿನ ಜನರ ಕಲ್ಯಾಣ ಕಾರ್ಯಕ್ರಮವನ್ನು ಮಾಡಲಿ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಜಿಲ್ಲಾತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಸೋನಿಯಾಗಾಂಧಿ ಬ್ರಿಗೇಡ್ ಅಧ್ಯಕ್ಷೆ ವೀಣಾಶಂಕರ್, ಯುವ ಸಮಿತಿ ಉಪಾಧ್ಯಕ್ಷೆ ಹೀನಾ, ನಗರಸಭೆ ಮಾಜಿ ಸದಸ್ಯ ಮಹೇಶ್, ನಗರಸಭೆ ಸದಸ್ಯರಾದ ರಾಮಲಿಂಗಯ್ಯ, ಗೀತಾ, ಶ್ರೀಧರ್, ನಹೀಂ, ಶಿವಪ್ರಕಾಶ್, ಜಿಲ್ಲಾ ಕುರುಬರ ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ಖಜಾಂಚಿ ಸಾತನೂರು ರಾಜು, ಮಹೇಶ್, ಕಾಂಗ್ರೆಸ್ ಮುಖಂಡರಾದ ಎಂ.ಎಸ್.ಚಿದಂಬರ್, ಹಳುವಾಡಿ ವೆಂಕಟೇಶ್, ರುದ್ರಪ್ಪ, ಸಿಎಂ. ದ್ಯಾವಪ್ಪ ಸೇರಿದಂತೆ ಇತರರು ಹಾಜರಿದ್ದರು.