ಇಂದು ಬಿಜೆಪಿ ರಾಷ್ಟ್ರದೆಲ್ಲೆಡೆ ಇರುವ ಏಕೈಕ ಪಕ್ಷ. ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಭಾಗದಲ್ಲಿ ಹೆಚ್ಚು ಮತದಾರರನ್ನು ಬಿಜೆಪಿ ಪಕ್ಷ ಹೊಂದಿದೆ ಎಂದು ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ರಾಷ್ಟ್ರದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಬಿಜೆಪಿ ಸದಸ್ಯತ್ವ ಪಡೆಯುವುದು ಹೆಮ್ಮೆಯ ವಿಷಯ ಎಂದು ಜನರು ಭಾವಿಸಿದ್ದಾರೆ. ಎಂಟು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದಲ್ಲಿ ಹಾಗೂ ಯಡಿಯೂರಪ್ಪ,ಬೊಮ್ಮಾಯಿ ಅವರ ಆಡಳಿತದಲ್ಲಿ ರಾಜ್ಯದ ಜನರು ನೆಮ್ಮದಿಯಿಂದಿದ್ದಾರೆ ಎಂದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಮಂಡ್ಯದಲ್ಲಿ 53,145 ಕುಟುಂಬಗಳಿಗೆ 10,000 ರೂ.ಹಾಕಲಾಗಿದೆ. ಕೊರೋನ ಸಂದರ್ಭದಲ್ಲಿ ಜನರ ಆತಂಕ ನಿವಾರಿಸಿ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಲಾಗಿದೆ. ಬಿಜೆಪಿ ಮಾತುಕೊಟ್ಟಂತೆ ನನಗೂ, ನಾರಾಯಣಗೌಡರಿಗೆ ಮಂತ್ರಿ ಸ್ಥಾನ ನೀಡಿ ಬೇರೆ ಬೇರೆ ಜಿಲ್ಲೆಗಳ ಉಸ್ತುವಾರಿ ನೀಡಿದೆ ಎಂದರು.
ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮಾತನಾಡಿ, ವಿಧಾನಸಭಾ ಚುನಾವಣೆಗೆ ಒಂದು ವರ್ಷ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಮಾಡುತ್ತಿದ್ದೇವೆ. ಮಂಡ್ಯ ಜಿಲ್ಲೆಯಲ್ಲಿ ಹಲವಾರು ಯುವನಾಯಕರು ಬಿಜೆಪಿ ಪಕ್ಷ ಸೇರಿಕೊಳ್ಳುತ್ತಿದ್ದಾರೆ. ಏಳು ಕ್ಷೇತ್ರಗಳಲ್ಲಿ ಬಿಜೆಪಿ ಬಾವುಟ ಹಾರಿಸುವುದು ನಮ್ಮ ಗುರಿ ಎಂದರು.
ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷಕ್ಕೆ ಶಾಸಕರ ಸಂಖ್ಯೆ ಕಡಿಮೆ ಇದೆ. ರಾಜ್ಯದಲ್ಲಿ ಸುಭದ್ರ ಸರ್ಕಾರ ತರಲು ಈ ಭಾಗದಲ್ಲಿ ಬಿಜೆಪಿ ಶಾಸಕರ ಸಂಖ್ಯೆ ಹೆಚ್ಚಾಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ರೇಷ್ಮೆ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣ ಗೌಡ, ಬಿಜೆಪಿ ಮುಖಂಡರಾದ ಚಂದಗಾಲು ಶಿವಣ್ಣ,ಮಹೇಶ್, ಸಿದ್ದರಾಮಯ್ಯ, ಮುಡಾ ಅಧ್ಯಕ್ಷ ಶ್ರೀನಿವಾಸ್, ನಗರಸಭಾ ಸದಸ್ಯ ಅರುಣ್ ಕುಮಾರ್, ಮುಖಂಡರಾದ ವಸಂತ್ ಕುಮಾರ್ ಮತ್ತಿತರರಿದ್ದರು.