ಎಸ್ಐಟಿ ಜಾರಿ ಮಾಡಿದ್ದ ನೋಟಿಸ್ ಅನ್ನು ಹೊಳೆನರಸೀಪುರದಲ್ಲಿರುವ ರೇವಣ್ಣ ಮನೆಗೆ ಸ್ಥಳೀಯ ಪೊಲೀಸರು ರವಾನಿಸಿದ್ದಾರೆ. ಗುರುವಾರ ಅಥವಾ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಲೈಂಗಿಕ ಹಗರಣ ಬೆಳಕಿಗೆ ಬಂದ ಬಳಿಕ, ಪ್ರಜ್ವಲ್ ದೇಶಬಿಟ್ಟು ಪರಾರಿಯಾಗಿದ್ದಾರೆ. ಅವರಿಗೂ ನೋಟಿಸ್ ನೀಡಲಾಗಿದೆ. ಜರ್ಮನಿಗೆ ತೆರಳಿದ್ದ ಆತ, ಈಗ ದುಬೈನಲ್ಲಿದ್ದಾರೆ ಎಂದು ವರದಿಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ರೇವಣ್ಣಗೆ ಎರಡು ನೋಟಿಸ್ ನೀಡಿದ್ದರೂ, ರೇವಣ್ಣ ವಿಚಾರಣೆಗೆ ಹಾಜರಾಗಿರಲ್ಲಿಲ್ಲ. ಹೀಗಾಗಿ, ಇದೀಗ 3ನೇ ನೋಟಿಸ್ ಜಾರಿ ಮಾಡಲಾಗಿದೆ.
ಅಲ್ಲದೆ, ಬುಧವಾರ ರಾತ್ರಿ ಮತ್ತು ಗುರುವಾರ ಬೆಳಗ್ಗೆ ಎಸ್ಐಟಿ ಅಧಿಕಾರಿಗಳ ತಂಡ ಬೆಂಗಳೂರು ಮತ್ತು ಹಾಸನ ಜಿಲ್ಲೆಯಲ್ಲಿರುವ ರೇವಣ್ಣ ಕುಟುಂಬದ ನಿವಾಸಗಳು, ಫಾರ್ಮ್ ಹೌಸ್ಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದೆ. ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ.
ಇದೆಲ್ಲದರ ನಡುವೆ, ಸಂತ್ರಸ್ತೆಯನ್ನು ರೇವಣ್ಣ ಅಪಹರಣ ಮಾಡಿದ್ದಾರೆ ಎಂದು ಸಂತ್ರಸ್ತೆಯೊಬ್ಬರ ಮಗ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ರೇವಣ್ಣ ಅವರ ಸಹಚರ ಸತೀಶ್ ಬಾಬಣ್ಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲಾ ಪಂಚಾಯತ್ನ ಮಾಜಿ ಸದಸ್ಯೆಯೊಬ್ಬರು ತನ್ನನ್ನು ಬೆದರಿಸಿ ಪ್ರಜ್ವಲ್ ರೇವಣ್ಣ ಪದೇ-ಪದೇ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ.