ಸಿ.ಗೌರಮ್ಮ ಚಿಕ್ಕಣ್ಣ ಸಮಾಜಸೇವಾ ಪ್ರಶಸ್ತಿ ಪ್ರದಾನ ಸಮಾರಂಭವು ಇದೆ ಅ.29ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ ಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಲಂಕೇಶ್ ಪತ್ರಿಕೆಯ ‘ಕಟ್ಟೆಪುರಾಣ’ ಖ್ಯಾತಿಯ ಅಂಕಣಕಾರ ಬಿ.ಚಂದ್ರೇಗೌಡ ಹಾಗೂ ವಿಕಸನ ಸಂಸ್ಥೆಯ ತರಬೇತಿ ಸಂಯೋಜಕಿ ಭಾಗ್ಯ ಕೆ. ಮಂಗಲ ಅವರನ್ನು ಸಿ.ಗೌರಮ್ಮ ಚಿಕ್ಕಣ್ಣ ಸಮಾಜಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹15,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಕೃಷಿಕ್ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ. ಹನುಮಂತು ವಹಿಸುವರು. ರಾಜ್ಯ ಒಕ್ಕಲಿಗರ ಸಂಘ ಅಧ್ಯಕ್ಷ ಡಿ.ಹನುಮಂತಯ್ಯ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ಸಂಘದ ಕಾರ್ಯದರ್ಶಿ ಲೋಕೇಶ್ ಚಂದಗಾಲು ಅಭಿನಂದನಾ ನುಡಿಗಳನ್ನಾಡುವರು ಎಂದರು.
ಮುಖ್ಯ ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಂ.ಪುಟ್ಟಸ್ವಾಮಿ, ವಿಶೇಷ ಆಹ್ವಾನಿತರಾಗಿ ಬೇಲೂರು ವ್ಯವಸಾಯ ಸೇವಾ ಸಹಕಾರ ಸಂಘ ಮಾಜಿ ಅಧ್ಯಕ್ಷ ಸಿ.ಚೌಡಯ್ಯ, ನಿವೃತ್ತ ಪ್ರಾಂಶುಪಾಲ ಎಂ.ಪುಟ್ಟಸ್ವಾಮಿ ಭಾಗವಹಿಸುವರು. ಚಿಕ್ಕಣ್ಣ ಗೌಡಯ್ಯನದೊಡ್ಡಿ, ವೈ.ಸಿ.ಚನ್ನಪ್ಪ ಉಪಸ್ಥಿತರಿರುವರು ಎಂದರು.
ಗೋಷ್ಠಿಯಲ್ಲಿ ಕರ್ನಾಟಕ ಸಂಘದ ಕಾರ್ಯದರ್ಶಿ ಎಸ್.ಡಿ.ಸೋಮಶೇಖರ್ ಉಪಸ್ಥಿತರಿದ್ದರು.