ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವೃದ್ದಿಗೆ ಪಟ್ಟಣದ ಮೂಡಲ ಬಾಗಿಲು ಆಂಜನೇಯ ದೇವಾಲಯದಲ್ಲಿ ತಾಲ್ಲೂಕು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ರಾಜ್ಯದ ರೈತರ ಸಾಲ ಮನ್ನಾದ ರೂವಾರಿ ಹಾಗೂ ಗ್ರಾಮ ವಾಸ್ತವ್ಯದ ಹರಿಕಾರ ಹೆಚ್.ಡಿ.ಕುಮಾರಸ್ವಾಮಿ ಅವರು ಅನಾರೋಗ್ಯ ನಿಮಿತ್ತ ಶಸ್ತ್ರ ಚಿಕಿತ್ಸೆಗೊಳಗಾಗಲು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ ವೃದ್ದಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.
ತಾಲ್ಲೂಕು ಜೆಡಿಎಸ್ ಅಧ್ಯಕ್ಷ ದಶರಥ ನೇತೃತ್ವದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಮಾಜಿ ಉಪಾಧ್ಯಕ್ಷ ಎಸ್.ಪ್ರಕಾಶ್, ರಾಜ್ಯದ ನೀರಾವರಿ ಯೋಜನೆಗಳ ಅಭಿವೃದ್ದಿಗೆ ಶ್ರಮಿಸಿರುವ ಹೆಚ್.ಡಿ.ದೇವೇಗೌಡರ ಸುಪುತ್ರ, ರೈತರ ಸಾಲ ಮನ್ನಾದ ರೂವಾರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿರಲು ಪೂಜೆ ಸಲ್ಲಿಸಲಾಗಿದೆ. ಕುಮಾರಸ್ವಾಮಿ ಅವರ ಸೇವೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣಕ್ಕೆ ಸದ್ಬಳಕೆಯಾಗಲಿ ಎಂದು ಹಾರೈಸಿದರು.
ಸೋತರೆ ರಾಜಕೀಯ ನಿವೃತ್ತಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಬಿಜೆಪಿ ಮುಖಂಡರು, ಸಂಸದೆ ಸುಮಲತಾ ಹಾಗೂ ಜಿಲ್ಲೆಯ ಜೆಡಿಎಸ್ ಮುಖಂಡರು ಶ್ರಮಿಸಲಿದ್ದು, ಜಿಲ್ಲೆಯ ಮತದಾರರು ಕುಮಾರಸ್ವಾಮಿ ಅವರ ಗೆಲುವಿಗೆ ಸಹಕರಿಸಬೇಕೆಂದು ಪ್ರಕಾಶ್ ಮನವಿ ಮಾಡಿದ್ದು, ಚುನಾವಣೆಯಲ್ಲಿ ಕುಮಾರಸ್ವಾಮಿ ಸೋಲು ಅನುಭವಿಸಿದರೆ ಪುರಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.