ಪುರಾಣ ಪ್ರಸಿದ್ಧ ಶ್ರೀರಂಗಪಟ್ಟಣದಲ್ಲಿ ನಾಡಹಬ್ಬ ದಸರಾ ಮಹೋತ್ಸವವನ್ನು ಅ.16 ರಿಂದ ಆಚರಿಸಲಾಗುವುದು, ಈ ಬಾರಿ ದಸರಾ ಮಹೋತ್ಸವ ಅಚ್ಚುಕಟ್ಟಾಗಿ, ಪಾರಂಪರಿಕವಾಗಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಪೂರ್ವಭಾವಿಯಾಗಿ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಜಿಲ್ಲೆಯ ಸಂಸ್ಕೃತಿಯ ಬಗ್ಗೆ ಹೆಚ್ಚಿನ ಕಾರ್ಯಕ್ರಮ ಆಯೋಜಿಸಿ ಸೂಚನೆ ನೀಡಿದರು.
ಕಿರಂಗೂರು ಬನ್ನಿಮಂಟಪ, ಜಂಬೂ ಸವಾರಿ ಸಾಗುವ ರಸ್ತೆ, ಕಾರ್ಯಕ್ರಮ ನಡೆಯುವ ವೇದಿಕೆ ಸ್ಥಳಗಳನ್ನು ಪರಿಶೀಲನೆ ನಡೆಸಿ ದುರಸ್ತಿ ಕೆಲಸಗಳಿದ್ದಲ್ಲಿ ಪ್ರಾರಂಭಿಸಿ ಬೇಗನೇ ಪೂರ್ಣಗೊಳಿಸಿ ಎಂದರು.
ಶ್ರೀರಂಗಪಟ್ಟಣ ದಸರಾ ನಡೆಯುವ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಆಕರ್ಷಣೀಯ ದೀಪಾಲಂಕಾರವನ್ನು ನಗರ ಸ್ಥಳೀಯ ಸಂಸ್ಥೆ ಅವರು ಆಯೋಜಿಸಿ ದಸರೆಗೆ ವಿಶೇಷ ಮೆರಗು ನೀಡುವಂತೆ ತಿಳಿಸಿದರು.
ಮೆರವಣಿಗೆಯಲ್ಲಿ ಪೊಲೀಸ್ ಬ್ಯಾಂಡ್ ಮತ್ತು ಅಶ್ವಪಡೆ ಭಾಗವಹಿಸಲು ವ್ಯವಸ್ಥೆ ಮಾಡಿಕೊಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆಯುವಂತೆ ತಿಳಿಸಿದರು.
ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು 5 ದಿನಗಳ ಕಾಲ ಆಯೋಜಿನೆ ಮಾಡುವುದರಿಂದ ರೈತ, ಮಹಿಳಾ, ಮಕ್ಕಳ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬಹುದು ಎಂದು ಶ್ರೀರಂಗಪಟ್ಟಣ ಶಾಸಕ ರಾಮೇಶ ಬಾಬು ಬಂಡೀಸಿದ್ದೇಗೌಡ ಅವರು ತಿಳಿಸಿದರು.
ಮುಖ್ಯಮಂತ್ರಿಗಳಿಗೆ ಈ ಬಾರಿ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿದ್ದು, ಕೃಷಿ ಸಚಿವರು ಸಹ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವಂತೆ ಕೋರಿದರು.
ದಸರಾ ಮಹೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯ ವಿಧಾನಸಭಾ ಹಾಗೂ ವಿಧಾನಪರಿಷತ್ ಶಾಸಕರನ್ನೊಳಗೊಂಡ ಸಂಪೂರ್ಣ ದಸರಾ ಆಚರಣಾ ಸಮಿತಿ, ವೇದಿಕೆ ಸಮಿತಿ, ಸಾಂಸ್ಕೃತಿಕ ಸಮಿತಿ, ಮೆರವಣಿಗೆ, ವಸ್ತು ಪ್ರದರ್ಶನ, ಆರೋಗ್ಯ, ನಗರ ಅಲಂಕಾರ, ಕ್ರೀಡಾ, ಆಹಾರ ಹಾಗೂ ಹಣಕಾಸು ಸಮಿತಿ ರಚಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅರಣ್ಯಾಧಿಕಾರಿ ರುದ್ರನ್ ಇತರರಿದ್ದರು .