ಮಂಡ್ಯ ಜಿಲ್ಲೆಯಾದ್ಯಂತ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, 10,963 ಬಾಲಕರು ಹಾಗೂ 10,073 ಬಾಲಕಿಯರು ಸೇರಿದಂತೆ ಒಟ್ಟಾರೆ 21,036 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಜಿಲ್ಲೆಯ 475 ಶಾಲೆಗಳ ವಿದ್ಯಾರ್ಥಿಗಳಿಗೆ ಒಟ್ಟು 83 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಮಾರ್ಚ್ 31 ರಂದು ಕನ್ನಡ, ಏಪ್ರಿಲ್ 3 ರಂದು ಗಣಿತ, ಏ.6 ರಂದು ಇಂಗ್ಲಿಷ್, ಏ.10 ರಂದು ವಿಜ್ಞಾನ, ಏ. 12 ರಂದು ಹಿಂದಿ, ಏ. 15 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ.
ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯನಿರ್ವಾಹಣಾ ಮಾರ್ಗಸೂಚಿಗಳು
- ಮಾರ್ಚಿ/ಏಪ್ರಿಲ್ 2023ರ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸಲು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
- ಬ್ಲಾಕ್ ಹಂತದಲ್ಲಿ ಓರ್ವ ಅಧಿಕಾರಿಯನ್ನು ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ.
- ಜಿಲ್ಲೆಯ ಎಲ್ಲಾ 83 ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ಹಾಗೂ ಕಸ್ಟೋಡಿಯನ್ ನೇಮಕ ಮಾಡಿಕೊಳ್ಳಲಾಗಿದೆ.
- ಜಿಲ್ಲೆಯ ಎಲ್ಲಾ 83 ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಅಳವಡಿಸಲಾಗಿದೆ.
- ಎಲ್ಲಾ ಬ್ಲಾಕ್ ಗಳಲ್ಲಿ ಪ್ರಶ್ನೆಪತ್ರಿಕೆಗಳ ಬಂಡಲ್ ಗಳನ್ನು ಪರೀಕ್ಷಾ ಕೇಂದ್ರಗಳಿಗೆ ರವಾನಿಸಲು ಮಾರ್ಗಾಧಿಕಾರಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ.
ಪರೀಕ್ಷಾ ಕಾರ್ಯಕ್ಕೆ ಜಿಲ್ಲಾ ಹಂತದಲ್ಲಿ 03 ಸಂಚಾರಿ ಜಾಗೃತ ದಳ ನೇಮಕ
- ಬ್ಲಾಕ್ ಹಂತದಲ್ಲಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಸ್ಥಾನಿಕ ಜಾಗೃತದಳ ಅಧಿಕಾರಿಯನ್ನು ನೇಮಿಸಲಾಗಿದೆ.
- ಪರೀಕ್ಷಾ ಪ್ರಶ್ನೆಪತ್ರಿಕೆಗಳ ಬಂಡಲ್ ಗಳನ್ನು ಪರೀಕ್ಷಾ ಮಂಡಳಿಯ ನಿಯಮದ ಪ್ರಕಾರ ಬ್ಲಾಕ್ ಹಂತದಲ್ಲಿ ಉಪಖಜಾನೆಯಲ್ಲಿ ಠೇವಣಿ ಮಾಡಲಾಗಿದೆ.
- ಜಿಲ್ಲಾ ಹಂತದಲ್ಲಿ ಪರೀಕ್ಷೆ ಮುಗಿದ ತರುವಾಯ ಉತ್ತರ ಪತ್ರಿಕೆಗಳ ಬಂಡಲ್ ಗಳನ್ನು ಸಂರಕ್ಷಿಸಲು ಉಪನಿರ್ದೇಶಕರ ಕಛೇರಿಯಲ್ಲಿ ಭದ್ರತಾ ಕೊಠಡಿಯನ್ನು ನಿರ್ಮಿಸಿಕೊಳ್ಳಲಾಗುವುದು.
- ಪರೀಕ್ಷಾ ಕಾರ್ಯ ಸುಗಮವಾಗಿ ನಡೆಯಲು ಪೋಲಿಸ್ ಬಂದೋಬಸ್ತ್ ವ್ಯವಸ್ಥೆಗಾಗಿ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಕೋರಲಾಗಿದೆ.
- ವಿಷಯ ಶಿಕ್ಷಕರಲ್ಲದವರನ್ನ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ.
- ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ನೆಲಮಹಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಳ್ಳಲಾಗಿದೆ.
- ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಎಲ್ಲಾ 83 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಉಪಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತದಳ ಅಧಿಕಾರಿಗಳು, ಕಸ್ಟೋಡಿಯನ್ ಗಳು, 03 ಸಂಚಾರಿ ಜಾಗೃತದಳದ ಅಧಿಕಾರಿಗಳಿಗೆ ಪರೀಕ್ಷಾ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಗಿದೆ.
ಜಿಲ್ಲಾಧಿಕಾರಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.