ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಕೆ.ಆರ್.ಪೇಟೆ, ನಾಗಮಂಗಲ ತಾಲೂಕಿನ ವಿವಿಧ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿದರು.
ಕೆ.ಆರ್.ಪೇಟೆ ತಾಲೂಕಿನ ಭಾರತಿಪುರ, ಅಘಲಯ, ಸಂತೆಬಾಚಹಳ್ಳಿ, ರಂಗನಾಥಪುರ ಕ್ರಾಸ್, ಸಾರಂಗಿ ಪಂಚಾಯತಿಗಳಲ್ಲಿ ಮಾಜಿ ಶಾಸಕರುಗಳಾದ ಕೆ.ಬಿ.ಚಂದ್ರಶೇಖರ್, ಪ್ರಕಾಶ್, ಡಿ.ಎಲ್.ದೇವರಾಜ್ ಸೇರಿದಂತೆ ಕಾಂಗ್ರೆಸ್ ನ ಹಲವು ಮುಖಂಡರೊಂದಿಗೆ ಸ್ಟಾರ್ ಚಂದ್ರು ರೋಡ್ ಶೋ ನಡೆಸಿ ಮತಯಾಚಿಸಿದರು.
ನಾಗಮಂಗಲದಲ್ಲಿ ಸ್ಟಾರ್ ಚಂದ್ರು ಅವರಿಗೆ ಸಚಿವ ಚಲುವರಾಯಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯ ಅಪ್ಪಾಜಿಗೌಡ ಸಾಥ್ ನೀಡಿದರು. ಅಂಚೆಚಿಟ್ಟನಹಳ್ಳಿ, ಹುಲೀಕೆರೆ, ಗೊಂಡೇನಹಳ್ಳಿ ಪಂಚಾಯತಿಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು.
ಈ ವೇಳೆ ಮಾತನಾಡಿದ ಸ್ಟಾರ್ ಚಂದ್ರು, ಜನರು ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿ ಈ ಬಾರಿ ನಮ್ಮ ಕೈ ಹಿಡಿಯಲಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ 25 ಭರವಸೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವನ್ನು ನಮ್ಮ ಕಾರ್ಯಕರ್ತರು ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ನಾನು ಇದೇ ಜಿಲ್ಲೆಯವನು. ನಿಮ್ಮ ಮಧ್ಯೆ ಇರುತ್ತೇನೆ. ಜನರ ಮತ್ತು ಸರ್ಕಾರದ ಕೊಂಡಿಯಾಗಿ ಕೆಲಸ ಮಾಡುತ್ತೇನೆ. ಪ್ರತಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿದ್ದೇನೆ. ನೀರಾವರಿ, ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
ಕಾಂಗ್ರೆಸ್ ಸರ್ಕಾರದ ಯೋಜನೆಗಳು ಪಕ್ಷಾತೀತವಾಗಿ ಎಲ್ಲರಿಗೂ ತಲುಪಿದೆ. ರಾಜ್ಯದ ಮಾದರಿಯಲ್ಲಿ ದೇಶದ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ಹಣವನ್ನು ಕೂಡ ಪಕ್ಷಾತೀತವಾಗಿ ನೀಡಲು ರಾಷ್ಟ್ರೀಯ ಕಾಂಗ್ರೆಸ್ ಘೋಷಿಸಿದೆ. ಇದರ ಜೊತೆಗೆ ಸಾಲಮನ್ನಾ, ನರೇಗಾ ಕೂಲಿ 400 ರೂ.ಗೆ ಹೆಚ್ಚಿಸಿರುವುದು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೀಗೆ 25 ಘೋಷಣೆಗಳನ್ನು ಜಾರಿಗೆ ತರಲಾಗುವುದು ಎಂದರು.