ವಿದ್ಯಾರ್ಥಿಗಳು ಓದುವ ಕಡೆ ಹೆಚ್ಚು ಗಮನ ಹರಿಸಬೇಕು. ಕೆಲವು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬಿದ್ದು ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ತಂಬಾಕು ನಿಯಂತ್ರಣ ಜಿಲ್ಲಾ ಸಲಹೆಗಾರ ತಿಮ್ಮರಾಜು ವಿಷಾದ ವ್ಯಕ್ತಪಡಿಸಿದರು.
ಮಂಡ್ಯ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನೆಹರು ಯುವ ಕೇಂದ್ರ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ರೋಟರಿ, ಅನನ್ಯ ಆರ್ಟ್ ಸಂಸ್ಥೆ ಸಹಯೋಗದಲ್ಲಿ ‘ಸ್ವಚ್ಚತಾ ಪಾಕ್ಷಿಕ’ ಕಾರ್ಯಕ್ರಮ ನಡೆಯಿತು.
18 ವರ್ಷ ಪೂರೈಸುವ ಮುನ್ನವೇ ದ್ವಿಚಕ್ರ ವಾಹನ ಚಲಾಯಿಸುವ ಗೋಜಿಗೆ ಹೋಗುತ್ತಿರುವುದು ಅಪಾಯಕಾರಿ ಬೆಳೆವಣಿಗೆ.ಇದನ್ನು ವಿದ್ಯಾರ್ಥಿಗಳು ಮಾಡಬಾರದು. ವಿದ್ಯಾರ್ಥಿಗಳು ಪೋಷಕರು ಮತ್ತು ಗುರುಗಳ ಮಾತುಗಳನ್ನು ಆಲಿಸಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರೋಟರಿ ಅಧ್ಯಕ್ಷರಾದ ಎಸ್.ನಾರಾಯಣ್ ಮಾತನಾಡಿ, ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಾಗಬೇಕು. ಮನೆಯ ಸುತ್ತಮುತ್ತಲಿನ ಪರಿಸರ ಕಾಪಾಡಿಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯವಾಗಬೇಕು. ಇದರಿಂದ ಉತ್ತಮ ಆರೋಗ್ಯ ನಮ್ಮದಾಗುತ್ತದೆ. ವಿದ್ಯಾರ್ಥಿಗಳು ವ್ಯಾಯಾಮ, ಧ್ಯಾನದಂತಹವುಗಳ ಕಡೆ ಗಮನ ಹರಿಸಬೇಕು. ಇದರಿಂದ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಹಲವು ಗಣ್ಯರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ತಮ್ಮೇಗೌಡ, ಬಿ.ಎಸ್.ಅನುಪಮಾ, ಎನ್.ವೈ.ಕೆ.ಹರ್ಷಾ, ಲೋಕೇಶ್, ಮೋಹನ್ ಸೇರಿದಂತೆ ಇತರರು ಭಾಗವಹಿಸಿದ್ದರು.