ವರದಿ: ಪ್ರಭು .ವಿ.ಎಸ್
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅಪಾರವಾದ ಪ್ರತಿಭೆ ಇದ್ದು ಅಂತಹವರನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಕದಲೂರು ಉದಯ್ ತಿಳಿಸಿದರು.
ಮದ್ದೂರು ತಾಲೂಕಿನ ಹೊಸಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು
ಸರ್ಕಾರಿ ಶಾಲೆಯಲ್ಲಿ ಹಲವಾರು ಸವಲತ್ತುಗಳು ಸಿಗದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ಕೊಠಡಿ ದುರಸ್ತಿ ಮತ್ತಿತ್ತರ ಸೌಲಭ್ಯಗಳಿಲ್ಲದೆ ವಿದ್ಯಾರ್ಥಿಗಳು ವಂಚಿತವಾಗಿದ್ದು, ಇದನ್ನರಿತು ಪ್ರತಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳನ್ನು ಉತ್ತೇಜಿಸುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದಾಗಿ ಹೇಳಿದರು.
ರೈತರು ಮತ್ತು ಕೂಲಿ ಕಾರ್ಮಿಕರ ಮಕ್ಕಳು ಬಡವರ್ಗದ ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಸಲುವಾಗಿ ಹಂತ ಹಂತವಾಗಿ ಸುಧಾರಣೆ ಮಾಡಿ ಸಾಲ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಶುಲ್ಕ ಪಾವತಿ ಮತ್ತು ಇನ್ನಿತರ ಕಾರ್ಯಗಳನ್ನು ಕೈಗೊಳ್ಳುವುದಾಗಿ ವಿವರಿಸಿದರು. ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಗ್ರಾಮದ ಯುವಕರಿಂದ ಕದಲೂರ್ ಉದಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ವೇಳೆ ಗ್ರಾಮ ಪಂಚಾಯತ್ ಸದಸ್ಯರಾದ ವಿನೋದ್, ಕೆಂಪಣ್ಣ, ಪುಟ್ಟಸ್ವಾಮಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವರಾಮು, ಸುರೇಶ್, ಮುಖ್ಯ ಶಿಕ್ಷಕಿ ಮಹೇಶ್ವರಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.