Sunday, May 19, 2024

ಪ್ರಾಯೋಗಿಕ ಆವೃತ್ತಿ

ಬಿಲ್ಕಿಸ್‌ ಬಾನೊ ಪ್ರಕರಣ| ಶರಣಾದ ಅತ್ಯಾಚಾರಿಗಳು: 11 ಜನ ಅಪರಾಧಿಗಳಿಗೆ ಮತ್ತೇ ಜೈಲು

ಸುಪ್ರೀಂ ಕೋರ್ಟ್ ವಿಧಿಸಿರುವ ಗಡುವಿಗೆ ಅನುಗುಣವಾಗಿ ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಜೈಲಿನ ಅಧಿಕಾರಿಗಳ ಮುಂದೆ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ 11 ಮಂದಿ ಅಪರಾಧಿಗಳು ಭಾನುವಾರ ತಡರಾತ್ರಿ ಶರಣಾಗಿದ್ದಾರೆ ಎಂದು ಸ್ಥಳೀಯ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಎನ್‌ಎಲ್ ದೇಸಾಯಿ ಹೇಳಿದ್ದಾರೆ.

“ಅಪರಾಧಿಗಳಿಗೆ ಕ್ಷಮಾದಾನ ನೀಡುವ ಪ್ರಕ್ರಿಯೆಯಲ್ಲಿ ಗುಜರಾತ್ ಸರ್ಕಾರವು ತನ್ನ ವಿವೇಚನಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ” ಎಂದು ಜನವರಿ 8ರಂದು ಚಾಟಿ ಬೀಸಿದ್ದ ಸುಪ್ರಿಂ ಕೋರ್ಟ್, “ಅಪರಾಧಿಗಳು ಮುಂದಿನ 2 ವಾರದೊಳಗೆ ಜೈಲಿಗೆ ಹಿಂದಿರುಗಬೇಕು” ಎಂದು ಆದೇಶ ಹೊರಡಿಸಿತ್ತು.

ಪೊಲೀಸರಿಗೆ ಶರಣಾಗಲು ನೀಡಲಾಗಿರುವ ಸಮಯಾವಕಾಶವನ್ನು ವಿಸ್ತರಿಸುವಂತೆ ಕೋರಿ ಕಳೆದ ಶುಕ್ರವಾರ (ಜನವರಿ 19) ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರಿಂ ಕೋರ್ಟ್ ವಜಾಗೊಳಿಸಿತ್ತು.

ಭಾನುವಾರ ತಡರಾತ್ರಿ 11 ಅಪರಾಧಿಗಳಾದ, ಬಕಾಭಾಯಿ ವೋಹಾನಿಯಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಗೋವಿಂದ್ ನಾಯ್, ಜಸ್ವಂತ್ ನಾಯ್, ಮಿತೇಶ್ ಭಟ್, ಪ್ರದೀಪ್ ಮೋರ್ಧಿಯಾ, ರಾಧೇಶ್ಯಾಮ್ ಶಾ, ರಾಜುಭಾಯ್ ಸೋನಿ, ರಮೇಶ್ ಚಂದನಾ ಮತ್ತು ಶೈಲೇಶ್ ಭಟ್ ಜೈಲಿಗೆ ಶರಣಾಗಿದ್ದಾರೆ.

ಘಟನೆ ಹಿನ್ನೆಲೆ 

2002ರಲ್ಲಿ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಸುರಕ್ಷಿತ ಜಾಗಕ್ಕೆ ತೆರಳುತ್ತಿದ್ದ ಬಿಲ್ಕಿಸ್‌ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಅವರ ಮೂರು ವರ್ಷದ ಮಗಳೂ ಸೇರಿದಂತೆ, ಕುಟುಂಬದ 7 ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಆಗ 21 ವರ್ಷದವರಾಗಿದ್ದ ಬಾನೊ, ಐದು ತಿಂಗಳ ಗರ್ಭಿಣಿಯೂ ಆಗಿದ್ದರು.

ಈ ಪ್ರಕರಣದ 11 ಅಪರಾಧಿಗಳಿಗೆ 2008ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ, ಗುಜರಾತ್ ಸರ್ಕಾರದ ಆದೇಶದ ಮೇರೆಗೆ ಎಲ್ಲ ಅಪರಾಧಿಗಳು 2022ರ ಆಗಸ್ಟ್‌ 15ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.

ಕೃಪೆ: ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!