ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರುಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯಶಿಕ್ಷಕಿ ವಿ ಪುಷ್ಪಲತಾ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಶಿಕ್ಷಕರು ಕರೆದೊಯ್ದಿದ್ದರು. ಆ ವೇಳೆ, ಶಿಕ್ಷಕಿ 10ನೇ ತರಗತಿ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಶಿಕ್ಷಕಿ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಬೆನ್ನಲ್ಲೇ, ಶಾಲೆಗೆ ಭೇಟಿ ನೀಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ವಿ ಉಮಾದೇವಿ ಮಾಹಿತಿ ಕಲೆ ಹಾಕಿ, ಶಿಕ್ಷಣ ಇಲಾಖೆಗೆ ವರದಿ ನೀಡಿದ್ದರು. ವರದಿ ಆಧರಿಸಿ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
“ಶಿಕ್ಷಕಿ ಶೈಕ್ಷಣಿಕ ಪ್ರವಾಸದ ಉದ್ದೇಶಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸುವ ಜವಾಬ್ದಾರಿಯನ್ನು ಮರೆತು ಶಿಕ್ಷಕಿ ವರ್ತಿಸಿದ್ದಾರೆ. ಅವರ ವಿರುದ್ಧ ವಿಚಾರಣೆ ಕಾಯ್ದಿರಿಸಲಾಗಿದೆ. ಅವರನ್ನು ಅಮಾನತು ಮಾಡಲಾಗಿದೆ” ಎಂಧು ಉಪನಿರ್ದೇಶಕ ಬೈಲಾಂಜನೇಯಪ್ಪ ಹೇಳಿದ್ದಾರೆ.
“ಪ್ರವಾಸದಲ್ಲಿ ಫೋಟೋಗಳನ್ನು ತೆಗೆಯಲಾಗುತ್ತಿತ್ತು. ಮನರಂಜನೆಗಾಗಿ ಮಕ್ಕಳಿಂದ ಹಾಡು ಹೇಳಿಸಲಾಗುತ್ತಿತ್ತು. ಆಗ ವಿದ್ಯಾರ್ಥಿಗಳ ಕೆನ್ನೆಗೆ ಮುತ್ತು ನೀಡಲಾಗಿತ್ತು. ಮಕ್ಕಳೊಂದಿಗೆ ಕೆಟ್ಟ ಉದ್ದೇಶದಿಂದ ವರ್ತಿಸಿಲ್ಲ” ಎಂದು ಶಿಕ್ಷಕಿ ಸಮಜಾಯಿಷಿ ನೀಡಿದ್ದಾರೆ.
ಕೃಪೆ: ಈದಿನ.ಕಾಂ