ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಸನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಡ್ಯ ಜಿಲ್ಲೆಯ ಶೋಷಿತ ಸಮುದಾಯಗಳ ಮುಖಂಡರು ರಾಜ್ಯಪಾಲರಿಗೆ ಕಪ್ಪುಬಾವುಟ ಪ್ರದರ್ಶನ ಮಾಡುವುದಾಗಿ ಪ್ರಕಟಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲ ತಾವರ್ ಚಂದ್ ಗೇಹ್ಲೋಟ್ ಅವರು ಶುಕ್ರವಾರ ಮಂಡ್ಯದಲ್ಲಿ ಪಾಲ್ಗೊಳ್ಳಬೇಕಾಗಿದ್ದ ಕಾರ್ಯಕ್ರಮಕ್ಕೆ ಗೈರಾದರು.
ಮಂಡ್ಯನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಘಟಿಕೋತ್ಸವ ಸಮಾರಂಭದದಲ್ಲಿ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲರು ಭಾಗವಹಿಸಿ ಅಧ್ಯಕ್ಷತೆ ವಹಿಸಬೇಕಿತ್ತು. ಇದೇ ಸಂದರ್ಭದಲ್ಲಿ ಹಲವು ಶೋಷಿತ ಸಂಘಟನೆಗಳ ಮುಖಂಡರು ರಾಜ್ಯಪಾಲರ ವಿರುದ್ದ ಪ್ರತಿಭಟಿಸಲು ನಿರ್ಧರಿಸಿದ್ದರು. ಈ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಮಾರಂಭದಿಂದ ದೂರ ಉಳಿದಿದ್ದಾರೆಂದು ತಿಳಿದು ಬಂದಿದೆ.
ರಾಜ್ಯಪಾಲರ ಗೈರಿನಿಂದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಎಸ್.ಸುಧಾಕರ್ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.
ಶೋಷಿತ ಸಮುದಾಯಗಳ ಮುಖಂಡರಿಂದ ಪ್ರತಿಭಟನೆ
ಮಂಡ್ಯನಗರದ ಸಂಜಯ ವೃತ್ತದಲ್ಲಿ ಮಂಡ್ಯ ಜಿಲ್ಲೆಯ ಶೋಷಿತ ಸಮುದಾಯಗಳ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಈ ಸಂದರ್ಭದಲ್ಲಿ ಮುಖಂಡರಾದ ಕೆ.ಹೆಚ್.ನಾಗರಾಜು, ಸಿ.ಎಂ.ದ್ಯಾವಪ್ಪ, ಸುಂಡಹಳ್ಳಿ ಮಂಜುನಾಥ್, ಎನ್.ಸಂದೇಶ್, ದೊಡ್ಡಯ್ಯ ಹಾಗೂ ಅಮ್ಜದ್ ಪಾಷ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.