ಕಳೆದ 12 ದಿನಗಳಿಂದ ಮಳೆ, ಚಳಿ, ಬಿಸಿಲಿನಲ್ಲಿ ಆರೋಗ್ಯವನ್ನು ಲೆಕ್ಕಿಸದೆ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಲಿ, ಕೃಷಿ ಮಂತ್ರಿ ಆಗಲಿ ಅಥವಾ ಸಂಬಂಧಪಟ್ಟ ರಾಜ್ಯ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಬಂದು, ರೈತರ ಬೇಡಿಕೆ ಆಲಿಸದಿರುವುದು ನಾಚಿಕೆಗೇಡಿನ ಸಂಗತಿ ಎಂದು ಜೆಡಿಎಸ್ ವಕ್ತಾರ ಮುದ್ದನಘಟ್ಟ ಮಹಾಲಿಂಗೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರಾಜ್ಯ ರೈತ ಸಂಘ ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ 12ನೇ ದಿನದ ಚಳುವಳಿಗೆ ಬೆಂಬಲ ನೀಡಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರದ ದಪ್ಪ ಚರ್ಮದ ಮಂತ್ರಿಗಳು ಮತ್ತು ಉನ್ನತ ಮಟ್ಟದ ಅಧಿಕಾರಿಗಳು ರೈತರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡದಿರುವುದು ಅಕ್ಷಮ್ಯ ಎಂದು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.
ರೈತರು ಬೆಳೆಯುವ ಪ್ರತಿ ಟನ್ ಕಬ್ಬಿಗೆ 4,500 ರೂಗಳನ್ನು ನಿಗದಿ ಮಾಡಿದರೆ ಸರ್ಕಾರಕ್ಕೆ ಯಾವುದೇ ನಷ್ಟವಾಗುವುದಿಲ್ಲ. ಪ್ರತಿ ಲೀಟರ್ ಹಾಲಿಗೆ 40 ರೈ ನೀಡಿದರೆ ರೈತರಿಗೆ ಅನುಕೂಲವಾಗುತ್ತದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರವು ಕೂಡಲೇ ರೈತರ ಹಲವು ಬೇಡಿಕೆಗಳನ್ನು ಈಡೇರಿಸಬೇಕು. ವಿದ್ಯುತ್ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು.ಕಾಯಂ ಆಗಿ ಭತ್ತ,ರಾಗಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಆಗ್ರಹಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನವಿರೋಧಿ ನೀತಿಗಳನ್ನು ಜಾರಿಗೆ ತಂದಿರುವ ಬಿಜೆಪಿ ಪಕ್ಷಕ್ಕೆ ಮತ ನೀಡದೆ ತಕ್ಕ ಉತ್ತರ ನೀಡಲು ರೈತರು ಮತ್ತು ನಾಗರಿಕರು ನಿರ್ಧರಿಸಿದ್ದು,ಬಿಜೆಪಿ ಸರ್ಕಾರ ಮತ್ತೆಂದೂ ರಾಜ್ಯದಲ್ಲಿ ಅಧಿಕಾರಕ್ಕೆ ಬರದಂತೆ ಮತದಾರರು ತೀರ್ಪು ನೀಡಲಿದ್ದಾರೆ ಎಂದು ಎಚ್ಚರಿಸಿದರು.
ರೈತ ನಾಯಕರಾದ ಮಧುಚಂದನ್ ಸೇರಿದಂತೆ ಮತ್ತಿತರರಿದ್ದರು.