ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯನವರ ಮಾರ್ಗದರ್ಶನದಲ್ಲಿ, ಮಿರ್ಜಾ ಇಸ್ಮಾಯಿಲ್ ನೇತೃತ್ವದಲ್ಲಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ತನ್ನದೇ ಆದ ಘನತೆ, ಗೌರವವಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಾಡೋಜ ಡಾ.ಮಹೇಶ ಜೋಷಿ ಹೇಳಿದರು.
ಮಂಡ್ಯ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ
ಗರಿಷ್ಟ 100 ಅಂಕ ಪಡೆದ ಮತ್ತು ಜಿಲ್ಲಾ, ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆದ 375 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಶೇ.100 ಫಲಿತಾಂಶ ಪಡೆದ ಪ್ರೌಢಶಾಲೆಗಳ 208 ಮುಖ್ಯ ಶಿಕ್ಷಕರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡಿಗರು ನಮ್ಮ ಕನ್ನಡ ಸಾಹಿತ್ಯ ಪರಿಷತ್ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಪ್ರಮುಖ ಸಂಸ್ಥೆಯಾಗಿದೆ, ಏಳು ಕೋಟಿ ಕನ್ನಡಿಗರನ್ನು ಪ್ರತಿನಿಧಿಸುವ, ಕನ್ನಡ-ಕನ್ನಡಿಗರ-ಕರ್ನಾಟಕವನ್ನು ಬಿಂಬಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಅಧಿಕಾರಿಗಳು ಗೌರವಿಸಬೇಕು. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಪ್ರೇರಕರಾದ ಶಿಕ್ಷಕರಿಗೆ, ತಂದೆತಾಯಿಗಳಿಗೆ ಮಹೇಶ ಜೋಷಿ ಅಭಿನಂದನೆಗಳನ್ನು ತಿಳಿಸಿದರು.
ಎಸ್.ಬಿ.ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ, ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಈ.ಸಿ.ನಿಂಗರಾಜ್ಗೌಡ, ಉದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕದಲೂರು ಉದಯ್, ಜೆಡಿಎಸ್ ಮುಖಂಡ ಮಹಾಲಿಂಗೇಗೌಡ ಮುದ್ದನಘಟ್ಟ ಮಾತನಾಡಿದರು.
ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ಅರಮನೆ ಶಂಕರ ಸೇವಾ ಪ್ರತಿಷ್ಠಾನದ ಅರಮನೆ ಶಂಕರ್, ಜಿಲ್ಲಾ ಕಸಾಪ ಅಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ, ಕಾರ್ಯದರ್ಶಿಗಳಾದ ಧನಂಜಯ ದರಸಗುಪ್ಪೆ, ಹುಸ್ಕೂರು ಕೃಷ್ಣೇಗೌಡ, ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ನಗರ ಕಸಾಪ ಅಧ್ಯಕ್ಷೆ ಸುಜಾತಕೃಷ್ಣ ಉಪಸ್ಥಿತರಿದ್ದರು.