ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ನ ಪ್ರಕರಣವಿಲ್ಲ. ಮುಂದಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದಲ್ಲಿ ಪೂರಕವಾಗಿ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮಂಡ್ಯದಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಮತ್ತು ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ಗಳಲ್ಲಿ ಐ.ಎಲ್.ಐ, ಎಸ್.ಎ.ಆರ್.ಐ ಲಕ್ಷಣಗಳುಳ್ಳವರಿಗೆ ಆರ್.ಎ.ಟಿ ಮತ್ತು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗಳನ್ನು ಹÉಚ್ಚಿನ ಪ್ರಮಾಣದಲ್ಲಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಕೋವಿಡ್ ಸಂಧರ್ಭದಲ್ಲಿ ಹಿಂದೆ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಇರುವುದರಿಂದ ಮಂಡ್ಯ ಮೆಡಿಕಲ್ ಕಾಲೇಜಿನಲ್ಲಿ, ಜಿಲ್ಲಾ ಆಸ್ಪತ್ರೆಗಳಲ್ಲಿ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಬಗ್ಗೆ ಪೂರ್ವ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಯಲ್ಲಿ ಬೆಡ್,ಆಕ್ಸಿಜನ್ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಪರಿಶೀಲನೆ ಮಾಡಿ. ಪ್ರತಿ ತಾಲ್ಲೂಕಿನಲ್ಲಿ ಆಯಾ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಹಂತದಲ್ಲಿ ಸಭೆಯನ್ನು ಮಾಡಿ ಸಾರ್ವಜನಿಕರು ಸಹ ಸರ್ಕಾರದಿಂದ ಹೊರಡಿಸಲಾಗುವ ಕೋವಿಡ್ ನಿಯಮಗಳನ್ನು ಪಾಲಿಸಿ. ಮಾಸ್ಕ್ ಧರಿಸಿ ಜಿಲ್ಲಾಡಾಳಿತದೊಂದಿಗೆ ಸಹಕರಿಸಿ ಎಂದರು.
ಇದೇ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ ಅವರು ಮಾತನಾಡಿ, ಕೋವಿಡ್ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಸಂಗ್ರಹಿಸಲಾಗುವ ಮಾದರಿಗಳನ್ನು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇಲ್ಲಿಗೆ ತಲುಪಿಸಲಾಗುವುದು. ಕನಿಷ್ಠ 4000 ಮಾದರಿಗಳನ್ನು ಪ್ರಯೋಗಶಾಲೆಯ ಪರೀಕ್ಷೆಗೆ ಒಳಪಡಿಸಬಹುದು. 4000 ಕ್ಕಿಂತ ಹೆಚ್ಚುವರಿ ಮಾದರಿಗಳು ಸಂಗ್ರಹವಾದಲ್ಲಿ ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇಲ್ಲಿಗೆ ನೀಡಿ ಪ್ರಯೋಗಶಾಲಾ ಪರೀಕ್ಷೆ ಮಾಡಿಸಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಆರ್.ಸಿ.ಹೆಚ್.ಅಧಿಕಾರಿ ಡಾ.ಅನಿಲ್ ಕುಮಾರ್, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಆಶಾಲತಾ, ಆರೋಗ್ಯ ಇಲಾಖೆಯ ಡಾ.ರವೀಂದ್ರ, ಡಾ.ಮರಿಗೌಡ, ಡಾ.ಜವರೇಗೌಡ, ಡಾ.ಶಶಿಧರ್ ಭವಾನಿ ಶಂಕರ್, ಡಾ.ಕೆ.ಪಿ ಅಶ್ವಥ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾಗರಾಜು, ಜಿಲ್ಲಾ ವಾರ್ತಾಧಿಕಾರಿ ಎಸ್.ಹೆಚ್.ನಿರ್ಮಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.