ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಕಠಿಣ ಕಾನೂನು ರೂಪಿಸುವ ಸಂಬಂಧ ಸದನದಲ್ಲಿ ಒತ್ತಾಯಿಸುವುದಾಗಿ ವಿಧಾನ ಪರಿಷತ್ ಸದಸ್ಯರಾದ ಮಧು ಜಿ. ಮಾದೇಗೌಡ ಹಾಗೂ ದಿನೇಶ್ ಗೂಳಿಗೌಡ ತಿಳಿಸಿದರು.
ಮಳವಳ್ಳಿ ಪಟ್ಟಣದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೀಡಾಗಿರುವ ಬಾಲಕಿಯ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗೂಳಿಗೌಡ, ಇಂತಹ ಘಟನೆಗಳಿಂದ ಸಮಾಜದಲ್ಲಿ ಆತಂಕ ಸೃಷ್ಟಿಯಾಗಿದೆ. ಮುಗ್ಧ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣ ಸಂಬಂಧ ಇನ್ನೂ ನಾಲ್ಕು ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ ಎಂದು ಪೊಲೀಸರು ತಿಳಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೆ ತರಲು ಸದನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಮಾತನಾಡಿ, ಇಂತಹ ಹೀನ ಕೃತ್ಯಗಳು ನಾಗರಿಕ ಸಮಾಜಕ್ಕೆ ಮಾರಕವಾಗಿದೆ. ಹೀನ ಕೃತ್ಯವೆಸಗಿರುವ ಆರೋಪಿಯನ್ನುಅತ್ಯಂತ ಕಠಿಣ ಶಿಕ್ಷೆಗೆ ಗುರಿಪಡಿಸಲು ಸರ್ಕಾರಕ್ಕೆ ಒತ್ತಾಯಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜು, ಮುಖಂಡರಾದ ವಿ.ಪಿ.ನಾಗೇಶ್, ಕೆ.ಎಸ್.ದ್ಯಾಪೇಗೌಡ, ಸಿ.ಮಾಧು, ಕನ್ನಹಳ್ಳಿ ಸುಂದ್ರಪ್ಪ, ಎಂ.ಲಿಂಗರಾಜು, ಸತೀಶ್, ತ್ಯಾಗರಾಜು ಸೇರಿದಂತೆ ಮತ್ತಿತರರಿದ್ದರು.