ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಪ್ರವಾಸಿ ಟ್ಯಾಕ್ಸಿಯನ್ನು ಕೊಡಿಸಿಕೊಡುವಂತೆ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಆಯ್ದ ವ್ಯಕ್ತಿಗಳಿಗೆ ಇಲಾಖೆಯಿಂದ ಎರಡು ಲಕ್ಷದ ಸಬ್ಸಿಡಿ ಯೋಜನೆಯಡಿಯಲ್ಲಿ ಟ್ಯಾಕ್ಸಿ ನೀಡತ್ತಾ ಬಂದಿದ್ದು, ಉದ್ಯೋಗ ಸಮಸ್ಯೆ ತಲೆದೋರುತ್ತಿರುವ ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಪ್ರವಾಸೋದ್ಯೋಮ ಇಲಾಖೆಗೆ ನೂರಾರು ಅರ್ಜಿಯನ್ನು ಸಲ್ಲಿಸಿದ್ದು, ಅದರಲ್ಲಿ 45 ಜನರನ್ನ ಆಯ್ಕೆ ಮಾಡಲಾಗಿದೆ, ಆದರೆ , ಸದರಿ ಅರ್ಜಿದಾರರಿಗೆ ಇದುವರೆಗೆ ಚೆಕ್ ವಿತರಣೆ ಮಾಡಿಲ್ಲ ಎಂದು ದೂರಿದರು.
ಪ್ರಸ್ತುತ ಹಂತದ ಕುರಿತು ಮಾಹಿತಿ ಪಡೆಯಲು ಮಂಡ್ಯ ಜಿಲ್ಲಾ ಪ್ರವಾಸೋದ್ಯಮಕ್ಕೆ ಭೇಟಿ ನೀಡಿದಾಗ 2009-10ನೇ ಸಾಲಿನಿಂದ 2019-20ನೇ ಸಾಲಿನವರೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಮಂಡ್ಯ ಜಿಲ್ಲೆಗೆ ಸರ್ಕಾರದಿಂದ ಮಂಜೂರಾಗಿರುವ ಗುರಿಗಳ ಪೈಕಿ ಇದುವರೆಗೆ ಗುರಿಗಳನ್ನು ಪೂರ್ಣಗೊಳಿಸದೇ ಬಾಕಿ ಇರುವ ಗುರಿಗಳ ಅನುದಾನವನ್ನು ಪ್ರವಾಸೋದ್ಯಮ ಇಲಾಖೆಗೆ ಹಿಂದಿರುಗಿಸುವಂತೆ ರಾಜ್ಯ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಹಣವನ್ನು ಹಿಂದಿರುಗಿಸುವಂತೆ ಪತ್ರ ಬರೆದಿರುವುದು ತಿಳಿದು ಬಂದಿದೆ.
ಈ ರೀತಿ ಅನುದಾನವನ್ನು ಹಿಂತಿರುಗಿಸದಿದ್ದಲ್ಲಿ ಪ್ರವಾಸಿ ಟ್ಯಾಕ್ಸಿಯನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ. ಸರ್ಕಾರ ಬಹಳಷ್ಟು ನಿರುದ್ಯೋಗ ಸಮಸ್ಯೆ ನಿವಾರಿಸಲು ಬಹಳ ಅನುದಾನ ನೀಡುತ್ತಿದ್ದರೂ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತಿಲ್ಲ. ಪ್ರವಾಸೋದ್ಯಮ ಇಲಾಖೆಯ ವ್ಯಾಪ್ತಿಯೊಳಗೆ ಟ್ಯಾಕ್ಸಿ ‘ಯೋಜನೆ ಪಡೆಯಲು ಮಂಡ್ಯ ಜಿಲ್ಲೆಯ ಸಾವಿರಾರು ಯುವಕರು ಪಡೆಯಲು ಅರ್ಜಿ ಸಲ್ಲಿಸಿರುತ್ತಾರೆ. ಅದರಲ್ಲಿ 45 ಜನರು ಆಯ್ಕೆಯಾಗಿರುವ ಫಲಾನುಭವಿಗಳಿಗೆ ತಕ್ಷಣ ಚೆಕ್ ವಿತರಿಸಬೇಕು. ಒಂದು ವೇಳೆ ಹಣವನ್ನು ಸರ್ಕಾರಕ್ಕೆ ಹಿಂದಿರುಗಿಸಿದರೆ ಕನ್ನಡ ಸೇನೆ ವತಿಯಿಂದ ಆಯ್ಕೆಯಾಗಿರುವ 45 ಜನರ ಜೊತೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮಂಜುನಾಥ್ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಸೇನೆ ರಾಜ್ಯ ಸಂಚಾಲಕ ಜಿ ಮಹಾಂತಪ್ಪ, ಜಿಲ್ಲಾ ಕಾರ್ಯದರ್ಶಿ ಮಂಡಿಬೆಟ್ಟಳ್ಳಿ ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೇಬಲ್ ಮಂಜು, ಮಂಡ್ಯ ತಾಲೂಕು ಅಧ್ಯಕ್ಷ ಸುಂಕನಹಳ್ಳಿ ಸತೀಶ್, ಮಂಡ್ಯ ನಗರ ಅಧ್ಯಕ್ಷ ಶಿವಾಲಿ, ಸಂಘಟನಾ ಕಾರ್ಯದರ್ಶಿ ಪವಿತ್ರ ಮತ್ತಿತರರಿದ್ದರು.