ಗಣಿಗಾರಿಕೆಗೆ ಸಂಬಂಧಿಸಿದಂತೆ ಕೆ ಆರ್ ಎಸ್ ಅಣೆಕಟ್ಟಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಉಚ್ಚ ನ್ಯಾಯಾಲಯವು ಆದೇಶ ಹೊರಡಿಸಿದೆ ಹಾಗೂ 6 ತಿಂಗಳ ಒಳಗೆ ಟ್ರಯಲ್ ಬ್ಲಾಸ್ಟಿಂಗ್ ನಡೆಸಿ ವರದಿ ನೀಡುವಂತೆ ಸಹ ಆದೇಶದಲ್ಲಿ ತಿಳಿಸಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟ್ರಯಲ್ ಬ್ಲಾಸ್ಟಿಂಗ್ ನಡೆಸುವ ಬಗ್ಗೆ ವಿವಿಧ ಇಲಾಖಾ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದ ಪ್ರಕಾರ 20 ಕಿಲೋಮೀಟರ್ ವ್ಯಾಪ್ತಿಯೊಳಗೆ ಯಾವುದೇ ಗಣಿಗಾರಿಕೆ ನಡೆಯದಂತೆ ನಿರ್ಬಂಧವನ್ನು ವಿಧಿಸಿ ನಿಗಾ ವಹಿಸಲಾಗುತ್ತಿದೆ ಎಂದರು.
ಕಾವೇರಿ ನೀರಾವರಿ ನಿಗಮ ನಿಯಮಿತ ಇಲಾಖೆಯವರು ಟ್ರಯಲ್ ಬ್ಲಾಸ್ಟಿಂಗ್ ಮಾಡಲು ಈಗಾಗಲೇ ತಜ್ಞರ ಸಮಿತಿಯನ್ನು ರಚನೆ ಮಾಡಿದ್ದು, ತಜ್ಞರ ಸಮಿತಿ ಭೇಟಿ ನೀಡಿ ಟ್ರಯಲ್ ಬ್ಲಾಸ್ಟಿಂಗ್ ಗೆ ದಿನಾಂಕ ನಿಗದಿಪಡಿಸಬೇಕಿದೆ ಎಂದರು.
ರೈತ ಪರ ಸಂಘಟನೆಗಳು ಟ್ರಯಲ್ ಬ್ಲಾಸ್ಟಿಂಗ್ ನಡೆಸಲು ವಿರೋಧ ವ್ಯಕ್ತ ಪಡಿಸುತ್ತಿದ್ದು, ಈ ಕುರಿತು ಸಭೆಯಲ್ಲಿ ಹಾಜರಿದ್ದ ರೈತ ಸಂಘಟನೆಗಳ ಜೊತೆ ಉಚ್ಛ ನ್ಯಾಯಾಲಯದ ಆದೇಶವಾಗಿದ್ದು ಟ್ರಯಲ್ ಬ್ಲಾಸ್ಟಿಂಗ್ ನಡೆಸಬೇಕಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಭೂ ವಿಜ್ಞಾನಿ ರೇಷ್ಮಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.