ಕ್ಷಯ ಒಂದು ಸಾಂಕ್ರಾಮಿಕ ರೋಗವಾಗಿದ್ದು, ನಿರಂತರ ಚಿಕಿತ್ಸೆಯಿಂದ ಕ್ಷಯ ಸಂಪೂರ್ಣ ಗುಣಪಡಿಸಬಹುದೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್ ಹೇಳಿದರು.
ಶ್ರೀರಂಗಪಟ್ಟಣದ ಪುರಸಭಾ ಸಭಾಂಗಣದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ ಶ್ರೀರಂಗಪಟ್ಟಣ ಇವರ ಸಂಯುಕ್ತ ಆಶ್ರಯದಲ್ಲಿ ಪೌರ ಕಾರ್ಮಿಕರಿಗಾಗಿ ಆಯೋಜಿಸಿದ್ದ “ಕ್ಷಯ ರೋಗ ಹಾಗೂ ತಂಬಾಕು ಉತ್ಪನ್ನಗಳ ಬಳಕೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ” ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕ್ಷಯ ಶ್ವಾಸಕೋಶಗಳಿಗಷ್ಟೇ ಅಲ್ಲದೆ ದೇಹದ ಇನ್ನಿತರ ಭಾಗಗಳಿಗೂ ಹರಡಬಹುದು ,ವಾರಕ್ಕಿಂತ ಹೆಚ್ಚು ಕಫ ಸಹಿತ ಕೆಮ್ಮು, ಸಂಜೆ ವೇಳೆ ಜ್ವರ ಬರುವುದು, ಹಸಿವಾಗದಿರುವುದು, ತೂಕ ಕಡಿಮೆ ಆಗುವುದು,ಇವು ಕ್ಷಯದ ಮುಖ್ಯ ಲಕ್ಷಣಗಳಾಗಿದ್ದು, ಕ್ಷಯದ ಪರೀಕ್ಷೆ ಮತ್ತು ಚಿಕಿತ್ಸೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುತ್ತವೆ. ಹಾಗಾಗಿ ಎಲ್ಲರೂ ಒಗ್ಗೂಡಿ ಕ್ಷಯರೋಗದ ವಿರುದ್ಧ ಹೋರಾಟ ನಡೆಸಿ ಕರ್ನಾಟಕವನ್ನು ಕ್ಷಯ ಮುಕ್ತ ರಾಜ್ಯವನ್ನಾಗಿಸೋಣ ಎಂದರು.
ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ, ತಂಬಾಕು ಉತ್ಪನ್ನಗಳ ಬಳಕೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.
ಈ ವೇಳೆ ಪುರಸಭಾ ಮುಖ್ಯಾಧಿಕಾರಿ ರಾಣಿ, ಪರಿಸರ ಅಭಿಯಂತರರಾದ ಸಹನಾ, ಹಿರಿಯ ಆರೋಗ್ಯ ನಿರೀಕ್ಷಕಿ ರೇಖಾ, ಆರೋಗ್ಯ ನಿರೀಕ್ಷಕಿ ಚಂಪಾ, ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ್ ಹಾಗೂ ಎಲ್ಲಾ ಪುರಸಭೆಯ ಪೌರ ಕಾರ್ಮಿಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು