ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಆಗುತ್ತಿರುವ ನಿರಂತರ ಅನ್ಯಾಯ ಖಂಡಿಸಿ ಜಿಲ್ಲಾ ವಿಕಲಚೇತನರ ಒಕ್ಕೂಟ, ಪ್ರೇರಣ ವಿಶೇಷ ಚೇತನರ ಟ್ರಸ್ಟ್ ನೇತೃತ್ವದಲ್ಲಿ ಮಂಡ್ಯನಗರದಲ್ಲಿ ಪ್ರತಿಭಟನೆ ನಡೆಸಿದರು.
ಮಂಡ್ಯ ನಗರದ ಸಂಜಯ ವೃತ್ತದಿಂದ ಮೆರವಣಿಗೆ ಹೊರಟು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಧರಣಿ ಸ್ಥಳದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು. ನಿರಂತರ ಧರಣಿಯಲ್ಲಿ ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದ ವಿಕಲಚೇತನರು ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದರು.
ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ವಾಸ್ತವ ಪರಿಸ್ಥಿತಿ ಅವಲೋಕಿಸದೆ ನೀಡುತ್ತಿರುವ ತೀರ್ಪು ಮಾರಕವಾಗಿವೆ, ಸಂಕಷ್ಟಕಾಲದಲ್ಲಿ ಪರಿಸ್ಥಿತಿ ಅಧ್ಯಯನಕ್ಕೆ ಮುಂದಾಗ ಬೇಕಾಗಿದೆ ಎಂದರು. ಸಂಕಷ್ಟಕಾಲದಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ಪರಿಹಾರ ರೂಪಿಸಬೇಕು, ಎರಡು ರಾಜ್ಯಗಳ ಜೊತೆ ಮಾತುಕತೆ ನಡೆಸಬೇಕು, ಕಾವೇರಿ ಶಾಶ್ವತ ಪರಿಹಾರಕ್ಕಾಗಿ ಸಂಕಷ್ಟ ಸೂತ್ರ ರೂಪಿಸಬೇಕು ಎಂದು ಆಗ್ರಹಿಸಿದರು
ಸಂಘದ ಮುಖಂಡರಾದ ಎಂ ಎಸ್ ಚಲುವರಾಜು,ದೇವರಾಜು, ಸಬ್ಬನಹಳ್ಳಿ ಶಿವಕುಮಾರ್, ಕೃಷ್ಣ, ಗಿರಿ ಗೌಡ, ಮಹಾದೇವ್, ಭಾರತಿ, ರತ್ನಮ್ಮ,ವಸಂತ ನೇತೃತ್ವ ವಹಿಸಿದ್ದರು.