ಅಸ್ಪೃಶ್ಯತೆ ಹೋಗಲಾಡಿಸಲು ಸಮಾಜದಲ್ಲಿರುವ ಪ್ರತಿಯೊಬ್ಬರೂ ಸಂಕಲ್ಪ ಮಾಡುವ ಮೂಲಕ ಅಸ್ಪೃಶ್ಯತೆ ನಿರ್ಮೂಲನೆ ಮಾಡಲು ಕೈ ಜೋಡಿಸಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶ ವಿ.ಮಾದೇಶ್ ಕರೆ ನೀಡಿದರು.
ಮಳವಳ್ಳಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಕಾನೂನು ಸೇವಾ ಸಮಿತಿ, ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೇರಿ ದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ ‘ವಿನಯ ಸಾಮರಸ್ಯ ಯೋಜನೆ, ಅಸ್ಪೃಶ್ಯತೆ ನಿರ್ಮೂಲನೆ ಸಾಮರಸ್ಯ ಜೀವನಕ್ಕೆ ದಾರಿ’ ಎಂಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಜೀವಂತವಾಗಿರುವ ಅಸ್ಪೃಶ್ಯತೆ ನಿರ್ಮೂಲನೆಗೆ ಎಲ್ಲರೂ ಜಾಗೃತಿಯೊಂದಿಗೆ ಮುಂದಾಗಬೇಕು. ಗ್ರಾಮೀಣ ಭಾಗದಲ್ಲಿ ಅಲಿಖಿತ ಕಾನೂನು ಹೆಚ್ಚಾಗಿದ್ದು, ಇದರ ಬಗ್ಗೆ ಶಿಕ್ಷಣ ಇಲಾಖೆಯ
ಸಹಯೋಗದೊಂದಿಗೆ ಜನರಲ್ಲಿ ಅರಿವು ಮೂಡಿಸಬೇಕಾದ ಕೆಲಸ ಮಾಡಬೇಕಿದೆ. ಸಂಕುಚಿತ ಮನೋಭಾವ ಇರುವ ವ್ಯಕ್ತಿಗಳ ಮನ ಪರಿವರ್ತನೆ ಮಾಡಿ ಎಲ್ಲರೂ ಸಮಾನರು ಎಂದು ಜಾಗೃತಿ ಮೂಡಿಸಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಎಂ.ವಿಜಯಣ್ಣ ಮಾತನಾಡಿ, ಎಲ್ಲರೂ ವೈಜ್ಞಾನಿಕ ಮನೋಭಾವದಿಂದ ನೋಡಿದಾಗ ಸಮಾಜಕ್ಕೆ ಅಂಟಿಕೊಂಡಿರುವ ಅಸ್ಪೃಶ್ಯತೆ, ಜಾತಿ ಪದ್ಧತಿ ಹಾಗೂ ತಾರತಮ್ಯ ಹೋಗಲಾಡಿಸಬಹುದು. ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಅಸ್ಪೃಶ್ಯತೆ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮಮತಾ ಶಿವಪೂಜಿ, ಅಪರ ಸಿವಿಲ್ ನ್ಯಾಯಾಧೀಶರಾದ ಸಚಿನ್ ಕುಮಾರ್ ಶಿವಪೂಜಿ, ಬಿಇಓ ಎಸ್.ಪಿ.ನಾಗರಾಜು, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜನಾರ್ಧನ್, ಪುರ ಠಾಣೆ ಇನ್ಸ್ಪೆಕ್ಟರ್ ಎ.ಕೆ.ರಾಜೇಶ್ ಸೇರಿದಂತೆ ಇತರರಿದ್ದರು.